ಅಮರಾವತಿ/ವಿಶಾಖಪಟ್ಟಣ: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ದಟ್ಟವಾದ ಮಂಜು ಆವರಿಸಿದ್ದರಿಂದ ಚಾಲಕನಿಗೆ ರಸ್ತೆ ಕಾಣಿಸದೆ, ಪ್ರಯಾಣಿಕರಿದ್ದ ಬಸ್ ಆಳವಾದ ಕಣಿವೆಗೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ.
ಘಟನೆಯು ತುಳಸಿಪಾಕಲು ಗ್ರಾಮದ ಸಮೀಪದ ಅರಣ್ಯ ಪ್ರದೇಶದ ಘಾಟ್ ರಸ್ತೆಯಲ್ಲಿ ಬೆಳಿಗ್ಗೆ 5:30 ರ ಸುಮಾರಿಗೆ ನಡೆದಿದೆ. ಚಿತ್ತೂರಿನಿಂದ ಹೊರಟಿದ್ದ ಈ ಬಸ್, ತೆಲಂಗಾಣದ ಭದ್ರಾಚಲಂನಲ್ಲಿರುವ ಪ್ರಸಿದ್ಧ ಶ್ರೀರಾಮ ದೇವಾಲಯಕ್ಕೆ ಭಕ್ತರನ್ನು ಕರೆದೊಯ್ಯುತ್ತಿತ್ತು. ಜಿಲ್ಲಾಧಿಕಾರಿಗಳ ಮಾಹಿತಿಯ ಪ್ರಕಾರ, ಬಸ್ನಲ್ಲಿ ಒಟ್ಟು 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಓರ್ವ ಕ್ಲೀನರ್ ಇದ್ದರು ಎಂದು ತಿಳಿದುಬಂದಿದೆ.
ದಟ್ಟ ಮಂಜೇ ಅಪಘಾತಕ್ಕೆ ಕಾರಣ
ಪೊಲೀಸ್ ಮೂಲಗಳ ಪ್ರಕಾರ, ಬೆಳಗಿನ ಜಾವ ಪ್ರದೇಶದಲ್ಲಿ ದಟ್ಟವಾದ ಮಂಜು ಆವರಿಸಿತ್ತು. ಘಾಟ್ ರಸ್ತೆಯ ತಿರುವಿನಲ್ಲಿ ಚಾಲಕನಿಗೆ ರಸ್ತೆ ಕಾಣಿಸದ ಕಾರಣ, ಬಸ್ ರಸ್ತೆ ಬಿಟ್ಟು ಕಡಿದಾದ ಇಳಿಜಾರಿಗೆ ಜಾರಿ ಕಣಿವೆಗೆ ಬಿದ್ದಿದೆ. ಬಸ್ ಬಿದ್ದ ರಭಸಕ್ಕೆ ಒಂಬತ್ತು ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಗಾಯಾಳುಗಳನ್ನು ಘಟನಾ ಸ್ಥಳದಿಂದ 15 ಕಿ.ಮೀ ದೂರದಲ್ಲಿರುವ ಚಿಂತೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರ ಆರೋಗ್ಯ ಸ್ಥಿರವಾದ ನಂತರ ಅವರನ್ನು ಭದ್ರಾಚಲಂ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.
ಪ್ರಧಾನಿ, ಸಿಎಂ ಸಂತಾಪ ಮತ್ತು ಪರಿಹಾರ
ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಘಟನೆಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ತಕ್ಷಣವೇ ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ವೈದ್ಯಕೀಯ ನೆರವು ನೀಡುವಂತೆ ಅವರು ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ: ಕೇಂದ್ರದ ಮಾಜಿ ಗೃಹ ಸಚಿವ, ಲೋಕಸಭೆಯ ಮಾಜಿ ಸ್ಪೀಕರ್ ಶಿವರಾಜ್ ಪಾಟೀಲ್ ನಿಧನ : ಗಣ್ಯರ ಸಂತಾಪ



















