ಬೀದರ್ : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಸರ್ವೆ ಕಾರ್ಯದ ವೇಳೆ ಮತ್ತೊಬ್ಬ ಬಿಎಲ್ಒ(BLO) ಹೃದಯಾಘಾತದಿಂದ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಅಮಲಾಪುರ ಗ್ರಾಮದಲ್ಲಿ ನಡೆದಿದೆ.
45 ವರ್ಷದ ಸುನೀಲ್ ಮೃತ BLO. ಭಾಲ್ಕಿ ತಾಲೂಕಿನ ಮೂಲದ ಸುನೀಲ್ ಅವರು ಕಳೆದ ಹಲವು ದಿನಗಳಿಂದ SIR ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಅಮಲಾಪುರ ಗ್ರಾಮದ 33ನೇ ಬೂತ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಬಳಿಕ ಕುಸಿದು ಬಿದ್ದಿದ್ದಾರೆ.
ಸ್ಥಳೀಯರು ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ವೇಳೆ ಸ್ಟಂಟ್ ಅಳವಡಿಸುವ ಸಂದರ್ಭದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನಲ್ಲೂ ಹೃದಯಾಘಾತದಿಂದ ಬಿಎಲ್ಒ ಸಾವು :
ಎಸ್ಐಆರ್ ಪ್ರಕ್ರಿಯೆಗೆ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತದಿಂದ ಬಿಎಲ್ಒ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಬಿಎಲ್ಒ ಆಗಿ ಕಾರ್ಯನಿರ್ವಹಿಸುತ್ತಿದ್ದ ನಟರಾಜ್ ಅವರು, ನಿನ್ನೆ (ಜುಲೈ 4) ಮನೆಯಿಂದ ಕರ್ತವ್ಯಕ್ಕೆ ಹೊರಟಿದ್ದ ವೇಳೆ ಏಕಾಏಕಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.

ನಿನ್ನೆಯಷ್ಟೇ ತುಮಕೂರಿನ ಗೂಳೂರು ಬಳಿ ಎಸ್ಐಆರ್ ಪ್ರಕ್ರಿಯೆಗೆ ತೆರಳುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಭುವನಾ ಅವರ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಅದರ ಬೆನ್ನಲ್ಲೇ ಹೃದಯಾಘಾತದಿಂದ ಇಬ್ಬರು ಬಿಎಲ್ಒ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ : ಮಂಕಿ ಪೊಲೀಸ್ ಠಾಣೆಯ ಪಿಎಸ್ಐ ಅಭಿನಂದನ್ ಬಂಧನ!



















