ಮೈಸೂರು: ಮೈಸೂರು ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರಿದಿದೆ, ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿರುವ ಘಟನೆ ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ನಡೆದಿದೆ.
ದಂಡನಾಯ್ಕ ಅಲಿಯಾಸ್ ಸ್ವಾಮಿ(58ವ) ಹುಲಿ ದಾಳಿಯಿಂದ ಮೃತಪಟ್ಟ ವ್ಯಕ್ತಿ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಘಟನೆ ನಡೆದಿದೆ.
ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾರೆ. 8 ತಿಂಗಳ ಹಿಂದೆ ಡಂಡ ನಾಯ್ಕ ಮೇಲೆ ಆನೆ ದಾಳಿ ನಡೆಸಿತ್ತು. ಆಗಾ ಪ್ರಾಣಾಪಾಯದಿಂದ ಪಾರಾಗಿದ್ದರು. ಇದೀಗ ಹುಲಿ ದಾಳಿಗೆ ದಂಡನಾಯ್ಕ ಬಲಿಯಾಗಿದ್ದಾರೆ.
ಪದೇ ಪದೇ ಹುಲಿ ದಾಳಿ ಹಿನ್ನಲೆ ಕಾಡಂಚಿನ ಗ್ರಾಮದ ನಿವಾಸಿಗಳು ಕಂಗಾಲಾಗಿದ್ದು, ಕೆಲಸಕ್ಕೆ ಹೋಗಲೂ ಸಾದ್ಯವಾಗದ ಪರಿಸ್ಥಿತಿ ಉಂಟಾಗಿದೆ. ಹುಲಿ ದಾಳಿಯಿಂದ ಈಗಾಗಲೇ ಹಲವು ರೈತರು ಪ್ರಾಣ ಕಳೆದುಕೊಂಡಿರುವ ನಡುವೆ ದನ ಕಾಯುತ್ತಿದ್ದ ರೈತನ ಬಳಿಯೇ ಹುಲಿ ಬಂದ ಘಟನೆ ಇತ್ತೀಚೆಗೆ ನಂಜನಗೂಡು ತಾಲೂಕಿನ ನೇರಳೆ ಗ್ರಾಮದಲ್ಲಿ ನಡೆದಿತ್ತು.
ಮನುಷ್ಯರು ಮಾತ್ರವಲ್ಲದೆ ಜಾನುವಾರುಗಳ ಮೇಲೂ ವ್ಯಾಘ್ರ ದಾಳಿ ನಡೆಸುತ್ತಿದ್ದು ಮೇಯಲು ಹೋದ ಪ್ರಾಣಿಗಳ ಜೊತೆಗೆ, ಕೊಟ್ಟಿಗೆಗೂ ನುಗ್ಗಿ ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ನಂಜನಗೂಡು ತಾಲೂಕಿನ ಉಪ್ಪನಹಳ್ಳಿಯಲ್ಲಿ ರೈತ ಸಣ್ಣಮಾದಯ್ಯ ಎಂಬವರಿಗೆ ಸೇರಿದ ಕೊಟ್ಟಿಗೆಗೆ ನುಗ್ಗಿದ್ದ ಹುಲಿ ಮೇಕೆಯನ್ನು ಕೊಂದು ತಿಂದಿತ್ತು.
ಮೈಸೂರು ಭಾಗದಲ್ಲಿ ನಿರಂತರ ಹುಲಿ ದಾಳಿ ಪ್ರಕರಣ ಹಿನ್ನಲೆ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ; ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ | ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ



















