ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿರುವ ಬೀಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಆರೋಪದ ಹಿನ್ನೆಲೆ ಯುವಕ ಮೃತಪಟ್ಟಿರುವ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮೃತರನ್ನು ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದ ಶಿವು ಕಮ್ಮಾರ (22) ಎಂದು ಗುರುತಿಸಲಾಗಿದೆ. ಬ್ರಹ್ಮ ನಗರದಲ್ಲಿ ಕಟ್ಟಡಕ್ಕೆ ಬಣ್ಣ ಬಳಿಯುವ ವೇಳೆ ಅವರು ಬಿದ್ದು ಕೈ ಹಾಗೂ ಸೊಂಟ ಭಾಗಕ್ಕೆ ಗಂಭೀರ ಗಾಯಗೊಂಡಿದ್ದರು.
ಗಾಯಗೊಂಡ ಯುವಕನನ್ನು ತಕ್ಷಣವೇ ಬೀಮ್ಸ್ ಆಸ್ಪತ್ರೆಗೆ ರಾತ್ರಿ 11 ಗಂಟೆಯ ಸುಮಾರಿಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಗೆ ದಾಖಲಾದ ಬಳಿಕವೂ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡಲಾಗಿಲ್ಲ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಏಳು ಮಂದಿ ವೈದ್ಯರು ಇದ್ದರೂ ಯಾರೂ ಗಮನಹರಿಸಲಿಲ್ಲ, ರಾತ್ರಿ ಪಾಳಿಯಲ್ಲಿದ್ದ ವೈದ್ಯರು ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಾಯಾಳುವಿನ ಸ್ಥಿತಿ ಹದಗೆಟ್ಟಿದ್ದು, ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ದರೆ ಜೀವ ಉಳಿಯುತ್ತಿತ್ತು ಎಂದು ಅವರು ಕಣ್ಣೀರಿಟ್ಟಿದ್ದಾರೆ.
ಇನ್ನೊಂದೆಡೆ, ಬೀಮ್ಸ್ ಆಡಳಿತ ಮಂಡಳಿ ಈ ಆರೋಪವನ್ನು ತಳ್ಳಿ ಹಾಕಿದ್ದು, ವೈದ್ಯರ ನಿರ್ಲಕ್ಷ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಗಾಯಾಳುವನ್ನು ಮೂರು ದಿನಗಳ ಬಳಿಕ ಆಸ್ಪತ್ರೆಗೆ ತರಲಾಗಿದೆ, ಮೊದಲು ತರಲಾಗಿದ್ದರೆ ಬದುಕಿಸಬಹುದಿತ್ತು ಎಂದು ವೈದ್ಯರು ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ : ಕ್ಲೋಸ್ ಆದ ಬಾರ್ ಶೆಟರ್ ಬಡಿದು ಎಣ್ಣೆಗಾಗಿ ಗಲಾಟೆ.. ಅಮಲಿನಲ್ಲಿ ಪೊಲೀಸರ ಮೇಲೂ ಕೈ ಮಾಡಿದ ವ್ಯಕ್ತಿ ಅರೆಸ್ಟ್!



















