ಕರ್ತವ್ಯಲೋಪ ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳ ವಿಚಾರಣೆಗೆ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ.
ನ್ಯಾಯಾಲಯಗಳಲ್ಲಿ ಖುಲಾಸೆಗೊಂಡ ಅಪರಾಧ ಪ್ರಕರಣಗಳ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಹೀಗಾಗಿ ತಪ್ಪಿತಸ್ಥರು ಶಿಕ್ಷೆಯಿಂದ ಪಾರಾಗುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ ತನಿಖೆಯಲ್ಲಿ ಲೋಪವೆಸಗಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆಗೆ ರಚಿಸಲಾಗಿದ್ದ ‘ಖುಲಾಸೆಗೊಂಡ ಅಪರಾಧ ಪ್ರಕರಣಗಳ ಪರಾಮರ್ಶೆ ಸಮಿತಿ’ಯ ವಿಚಾರಣೆ ಮಾರ್ಗಸೂಚಿ ಪರಿಷ್ಕರಣೆಗೆ ಮುಂದಾಗಿದೆ.
ಸರಕಾರದ ಇತರೆ ಇಲಾಖೆಗಳಲ್ಲಿ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ವಿಚಾರಣೆಗೆ ನಿವೃತ್ತ ನ್ಯಾಯಾಧೀಶರನ್ನು ನೇಮಿಸಲು ಅವಕಾಶ ಕಲ್ಪಿಸಲಾಗಿದೆ. ನ್ಯಾಯಾಲಯಗಳಲ್ಲಿ ದಾಖಲಾದ ಅಪರಾಧ ಪ್ರಕರಣಗಳಲ್ಲಿ ಶೇ.10ರಷ್ಟು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆ ಪ್ರಕಟವಾಗುತ್ತಿದ್ದು, ಶೇ. 90ರಷ್ಟು ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾಗುತ್ತಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್, ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಪೊಲೀಸ್ ಇಲಾಖೆಯಲ್ಲಿ”ಖುಲಾಸೆಗೊಂಡ ಅಪರಾಧ ಪ್ರಕರಣಗಳ ಪರಾಮರ್ಶೆ ಸಮಿತಿ” ರಚಿಸುವಂತೆ ನಿರ್ದೇಶನ ನೀಡಿತ್ತು. ಅದರಂತೆ ಪೊಲೀಸ್ ಇಲಾಖೆಯಲ್ಲಿ ಕಮಿಷನರೇಟ್ ಮತ್ತು ಜಿಲ್ಲಾ ಮಟ್ಟದಲ್ಲಿ ಸಮಿತಿಗಳು ರಚನೆಯಾಗಿವೆ.
ಸಮಿತಿಯಲ್ಲಿ ವಿಚಾರಣೆಯನ್ನು ಪೊಲೀಸ್ ಅಧಿಕಾರಿಗಳೇ ನಡೆಸುತ್ತಿದ್ದರಿಂದ ನ್ಯಾಯಯುತವಾಗಿ ಮತ್ತು ಕ್ರಮಬದ್ಧವಾಗಿ ವಿಚಾರಣೆ ನಡೆಯುತ್ತಿಲ್ಲ ಎಂದು ವಿಚಾರಣೆ ಎದುರಿಸಿದ್ದ ಪೊಲೀಸ್ ಅಧಿಕಾರಿಯೊಬ್ಬರು ಕೆಎಟಿ ಮೊರೆ ಹೋಗಿದ್ದರು. ಇದನ್ನು ಉದಾಹರಣೆಯಾಗಿಸಿಕೊಂಡು ಕರ್ನಾಟಕ ಆಡಳಿತ ನ್ಯಾಯ ಮಂಡಳಿಯು, ಸಮಿತಿಯ ವಿಚಾರಣೆ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಬೇಕು ಎಂದು ನಿರ್ದೇಶನ ನೀಡಿತ್ತು. ಹೀಗಾಗಿ ಪೊಲೀಸ್ ಇಲಾಖೆಯು ಸಮಿತಿಯ ವಿಚಾರಣೆ ಮಾರ್ಗಸೂಚಿಯನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಇನ್ಸ್ಪೆಕ್ಟರ್ ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವ ಪ್ರಕರಣ ಕಂಡು ಬಂದರೆ ಪೂರ್ಣ ಪ್ರಮಾಣದ ದಾಖಲೆಯನ್ನು ಪ್ರಧಾನ ಕಚೇರಿಗೆ ಕಳುಹಿಸುವಂತೆ ಸೂಚಿಸಲಾಗಿದೆ. ಸಮಿತಿಯ ಶಿಫಾರಸಿನಂತೆ ಪೊಲೀಸ್ ಇನ್ಸ್ಪೆಕ್ಟರ್ಗಳಿಗಿಂತ ಕೆಳಹಂತದ ಹುದ್ದೆಗಳ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕಾಗಿ ಇಲಾಖಾ ವಿಚಾರಣೆಗಳಲ್ಲಿ ನಿವೃತ್ತ ನ್ಯಾಯಾಧೀಶರನ್ನು ವಿಚಾರಣಾಧಿಕಾರಿಗಳನ್ನಾಗಿ ನೇಮಿಸಬೇಕಿದೆ ಎಂದು ಪೊಲೀಸ್ ಇಲಾಖೆಯ ಎಐಜಿಪಿ (ಆಡಳಿತ) ಕಲಾ ಕೃಷ್ಣಸ್ವಾಮಿ ಆದೇಶದಲ್ಲಿ ಹೇಳಿದ್ದಾರೆ.