ಬೆಂಗಳೂರು: ಲಿವಿಂಗ್ ರಿಲೇಶನ್ನಲ್ಲಿ ವಾಸಿಸುತ್ತಿದ್ದ ಯುವತಿಯೊಂದನ್ನು ಕೇಬಲ್ ವೈರ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ ಘಟನೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
23 ವರ್ಷದ ರಂಜಿತಾ ಕೊಲೆಯಾದ ಯುವತಿ. ಅಯ್ಯಪ್ಪ ಎಂಬಾತ ಈ ಕೃತ್ಯ ಎಸಗಿರುವ ಆರೋಪಿಯಾಗಿದ್ದು, ಇಬ್ಬರೂ ಕೊಡಗು ಜಿಲ್ಲೆಯ ಮೂಲದವರಾಗಿದ್ದಾರೆ.
ಮದುವೆಯಾದ ಬಳಿಕ ಪತ್ನಿಯೊಂದಿಗೆ ಜಗಳವಾಡಿಕೊಂಡಿದ್ದ ಅಯ್ಯಪ್ಪ ಕೆಲ ವರ್ಷಗಳ ಹಿಂದೆ ಪತ್ನಿಯಿಂದ ದೂರವಾಗಿದ್ದನು. ನಂತರ ತನ್ನದೇ ಊರಿನ ರಂಜಿತಾಳನ್ನು ಪ್ರೀತಿಸಿ, ಬೇರೆ ಜಾತಿಯವರಾಗಿದ್ದರೂ ಮದುವೆಯಾಗುವುದಾಗಿ ಹೇಳಿ ಆಕೆಯನ್ನು ಒಪ್ಪಿಸಿ ಬೆಂಗಳೂರಿಗೆ ಕರೆತಂದಿದ್ದನು.
ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರೂ ಕೆಲ ತಿಂಗಳುಗಳಿಂದ ಒಟ್ಟಿಗೆ ವಾಸಿಸುತ್ತಿದ್ದರು. ಅಯ್ಯಪ್ಪ ಡ್ರೈ ಫ್ರೂಟ್ಸ್ ಅಂಗಡಿಯೊಂದರಲ್ಲಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದನು.
ಇತ್ತೀಚೆಗೆ ಇಬ್ಬರ ನಡುವೆ ಜಗಳ ಹೆಚ್ಚಾಗಿದ್ದು, ಅಯ್ಯಪ್ಪ ಜಾತಿ ನಿಂದನೆ ಮಾಡಿ ಹಲ್ಲೆ ಮಾಡುತ್ತಿದ್ದಾನೆ ಎಂದು ರಂಜಿತಾ ತನ್ನ ಪೋಷಕರಿಗೆ ಹೇಳಿಕೊಂಡಿದ್ದಳು ಎಂದು ತಿಳಿದುಬಂದಿದೆ.
ಈ ಮಧ್ಯೆ ಎರಡು-ಮೂರು ದಿನಗಳ ಬಳಿಕ ರಂಜಿತಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಯ್ಯಪ್ಪ ಯುವತಿಯ ಕುಟುಂಬಸ್ಥರಿಗೆ ಕರೆ ಮಾಡಿ ತಿಳಿಸಿದ್ದನು. ಆದರೆ ಘಟನೆ ಕುರಿತು ಅನುಮಾನಗೊಂಡ ರಂಜಿತಾ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರು ತನಿಖೆ ನಡೆಸಿದ ವೇಳೆ ಕೇಬಲ್ ವೈರ್ನಿಂದ ಕುತ್ತಿಗೆ ಬಿಗಿದು ರಂಜಿತಾಳನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಬಳಿಕ ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಕೊಡಗು ಜಿಲ್ಲೆಯ ಪೊನ್ನಂಪೇಟೆಗೆ ಕುಟುಂಬಸ್ಥರು ಕರೆದೊಯ್ದಿದ್ದಾರೆ.
ಇದನ್ನೂ ಓದಿ : 76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ



















