ಹೈದರಾಬಾದ್: ಪಹಲ್ಗಾಮ್ ನಲ್ಲಿ ದಾಳಿ ಮಾಡಿದ ಲಷ್ಕರೆ ತಯ್ಬಾ ಸೇರಿ ಹಲವು ಉಗ್ರ ಸಂಘಟನೆಗಳ ನೆಲೆಗಳನ್ನು ಧ್ವಂಸಗೊಳಿಸಿದ ಭಾರತೀಯ ಸೇನೆಯ ಸಾಹಸವನ್ನು ದೇಶಾದ್ಯಂತ ಕೊಂಡಾಡಲಾಗುತ್ತಿದೆ. ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವರು ಸೇನೆ ಕುರಿತು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಪ್ರತಿಕ್ರಿಯಿಸಿದ್ದು, “ಪಾಕಿಸ್ತಾನದ ಉಗ್ರರನ್ನು ಸಂಪೂರ್ಣವಾಗಿ ನಾಶಪಡಿಸಬೇಕು” ಎಂದಿದ್ದಾರೆ.
“ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ಭಾರತೀಯ ಸೇನೆಯ ಕಾರ್ಯಾಚರಣೆ ಕುರಿತು ಹೆಮ್ಮೆ ಎನಿಸುತ್ತದೆ. ಪಾಕಿಸ್ತಾನಕ್ಕೆ ಇನ್ನೂ ಕಠಿಣ ಪಾಠ ಕಲಿಸಬೇಕು. ಪಾಕಿಸ್ತಾನದಲ್ಲಿರುವ ಉಗ್ರವಾದವನ್ನು ಸಂಪೂರ್ಣವಾಗಿ ನಾಶಪಡಿಸಬೇಕು. ಪಾಕ್ ನಲ್ಲಿ ಉಗ್ರರಿಗೆ ಸಿಕ್ಕಿರುವ ಮೂಲ ಸೌಕರ್ಯಗಳನ್ನು ಸಂಪೂರ್ಣವಾಗಿ ನಿರ್ನಾಮ ಮಾಡಬೇಕು” ಎಂದು ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯಲ್ಲಿ 80ಕ್ಕೂ ಅಧಿಕ ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ. ಆದಾಗ್ಯೂ, ಉಗ್ರರ ಸಾವಿನ ಕುರಿತು ನಿಖರ ಮಾಹಿತಿಯನ್ನು ಸೇನಾಧಿಕಾರಿಗಳು ಕಲೆಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅತ್ತ, ದಾಳಿಯ ಕುರಿತು ಸುದ್ದಿಗೋಷ್ಠಿ ನಡೆಸಿದ ಸೇನೆಯು, “ಪ್ರತೀಕಾರದ ಮೂಲಕ ಹತ ಭಾರತೀಯರಿಗೆ ನ್ಯಾಯ ಒದಗಿಸಲಾಗಿದೆ” ಎಂದು ತಿಳಿಸಿದೆ.
ಮತ್ತೊಂದೆಡೆ, ಆಪರೇಷನ್ ಸಿಂಧೂರದ ಬಳಿಕ ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಅಂತಾರಾಷ್ಟ್ರೀಯ ಗಡಿ ರೇಖೆ ಬಳಿಕ ಪಾಕಿಸ್ತಾನದ ಸೈನಿಕರು ಸತತವಾಗಿ ಗುಂಡಿನ ದಾಳಿ ನಡೆಸಿದ ಕಾರಣ ಮೂವರು ನಾಗರಿಕರು ಮೃತಪಟ್ಟಿದ್ದಾರೆ. ಹಾಗಾಗಿ, ಗಡಿಯಲ್ಲಿರುವ ನಾಗರಿಕರನ್ನು ಸ್ಥಳಾಂತರಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆದೇಶಿಸಿದ್ದಾರೆ.