ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು (Rain) ಮತ್ತಷ್ಟು ಚುರುಕು ಪಡೆದುಕೊಂಡಿದೆ. ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ. ನಗರದ ಸಾಯಿ ಲೇಔಟ್ಗೆ (Sai Layout) ಜಲ ಕಂಟಕ ಎದುರಾಗಿದ್ದು, ಮನೆಗಳಿಗೆ ಮಳೆ ನೀರು ನುಗ್ಗಿ ಜನರು ಸಂಕಷ್ಟ ಪಟ್ಟಿದ್ದಾರೆ. ಅಲ್ಲದೇ, ಒಂದೇ ಮಳೆಗೆ ಜನರು ಬೆಚ್ಚಿ ಬಿದಿದ್ದಾರೆ. ಸಾಯಿಲೇಔಟ್ ಗೆ ನೀರು ನುಗ್ಗಿ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಬೆಳಗಿನವರೆಗೂ ಅಲ್ಲಿನ ಸಾಯಿಮಂದಿರಕ್ಕೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ರಾಜಕಾಲುವೆ ತುಂಬಿ ಮನೆಗಳಿಗೆ ನೀರು ನುಗ್ಗಿದೆ. ಹಲವೆಡೆಯ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದೆ. ಹಲವೆಡೆ ಚರಂಡಿ ನೀರು ನುಗ್ಗಿದ್ದು, ಜನ ರಾತ್ರಿಯಿಡೀ ಪರದಾಟ ನಡೆಸುವಂತಾಗಿದೆ. ದಿಢೀರ್ ಸುರಿದ ಮಳೆಗೆ ರಸ್ತೆಯಲ್ಲಿ ಮೂರ್ನಾಲ್ಕು ಅಡಿ ನೀರು ನಿಂತಿದ್ದು, ಹಲವು ಬೈಕ್ ಗಳು ಮುಳುಗಿ ಹೋಗಿದ್ದವು. ಹೀಗಾಗಿ ವಾಹನ ಸವಾರರು ಪರದಾಟ ನಡೆಸಿದ್ದರು. ಮಳೆಯಿಂದಾಗಿ ಆರ್ ಸಿಬಿ ಹಾಗೂ ಕೆಕೆಆರ್ ನಡುವಿನ ಪಂದ್ಯ ರದ್ದಾಗಿದೆ. ಹೀಗಾಗಿ ಅಭಿಮಾನಿಗಳು ಕೂಡ ನಿರಾಸೆಗೊಂಡಿದ್ದಾರೆ. ಕೊಹ್ಲಿ ಅಭಿಮಾನಗಳಂತೂ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.