ಬೆಂಗಳೂರು: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದ ಜನರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಬೆಂಗಳೂರಿನಿಂದ ಮುಂಬಯಿಗೆ ಸೂಪರ್ ಫಾಸ್ಟ್ ರೈಲು ಘೋಷಣೆ ಮಾಡಿದ್ದಾರೆ. ಆ ಮೂಲಕ ಬೆಂಗಳೂರಿನ ಜನತೆಯ 30 ವರ್ಷಗಳ ಬೇಡಿಕೆ ಈಡೇರಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ವಿಚಾರವಾಗಿ ಮಾತನಾಡಿರುವ ಸಚಿವ ಅಶ್ವಿನಿ ವೈಷ್ಣವ್, ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿವೆ. ಹಾಗಾಗಿ ಇದು ಪ್ರಮುಖ ಯೋಜನೆ ಆಗಿದೆ ಎಂದು ಹೇಳಿದ್ದಾರೆ.
ಈ ವೇಳೆ ಸಂಸದ ತೇಜಸ್ವಿ ಸೂರ್ಯ ಕಾರ್ಯವನ್ನು ಶ್ಲಾಘಿಸಿದ ಅಶ್ವಿನಿ ವೈಷ್ಣವ್, ಬೆಂಗಳೂರು ಟು ಮುಂಬೈ ನಡುವಿನ ಸೂಪರ್ಫಾಸ್ಟ್ ರೈಲಿಗಾಗಿ ತೇಜಸ್ವಿ ಅವರು ನಿರಂತರ ಪ್ರಯತ್ನಿಸಿದ್ದು ನನಗೆ ತುಂಬಾ ಸಂತೋಷವಾಗಿದೆ. ನೀವು ಯಾವಾಗಲೂ ಬೆಂಗಳೂರಿನ ಜನರಿಗಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಹೊಗಳಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಕೂಡ ಈ ವಿಚಾರವಾಗಿ ಮಾತನಾಡಿ, ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಎರಡೂ ನಗರಗಳ ಜನರ 30 ವರ್ಷಗಳ ಬೇಡಿಕೆ ಈಡೇರಿದೆ ಎಂದಿದ್ದಾರೆ.
ಸದ್ಯ ಬೆಂಗಳೂರು ಮತ್ತು ಮುಂಬೈ ಮಧ್ಯೆ ಉದ್ಯಾನ್ ಎಕ್ಸ್ಪ್ರೆಸ್ ಒಂದೇ ಸಂಚಾರ ನಡೆಸುತ್ತಿದ್ದು, ಇದು 24 ಗಂಟೆಗಳಿಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತದೆ. ಕಳೆದ ವರ್ಷ 26 ಲಕ್ಷಕ್ಕೂ ಹೆಚ್ಚು ಜನರು ಈ ಎರಡೂ ನಗರಗಳಿಗೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಹೀಗಾಗಿ 30 ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಸದ್ಯ ಈ ಹೊಸ ಸೂಪರ್ಫಾಸ್ಟ್ ರೈಲಿನ ಸೇವೆಯು ಲಕ್ಷಾಂತರ ಪ್ರಯಾಣಿಕರಿಗೆ ಕೈಗೆಟುಕುವ ದರದೊಂದಿಗೆ ಅನುಕೂಲಕರವಾಗಲಿದೆ ಎಂದು ಹೇಳಿದ್ದಾರೆ.
ಬಹುದಿನದ ಕನಸನ್ನು ನನಸಾಗಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕರ್ನಾಟಕ ಮತ್ತು ಕನ್ನಡಿಗರ ಪರವಾಗಿ ಸಂಸದ ತೇಜಸ್ವಿ ಸೂರ್ಯ ಕೃತಜ್ಞತೆ ಸಲ್ಲಿಸಿದರು. ಜೊತೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣಗೆ ಧನ್ಯವಾದ ತಿಳಿಸಿದ್ದಾರೆ.


















