ನವದೆಹಲಿ: ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಭವಾನಿ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ, ಇಲ್ಲಿ ಆ ರೀತಿ ಕಾಣುತ್ತಿಲ್ಲ ಎಂದು ಹೇಳಿದೆ.
ಮೈಸೂರು ಜಿಲ್ಲೆ ಕೆಆರ್ ನಗರ ಮಹಿಳೆ ಕಿಡ್ನ್ಯಾಪ್ ಆರೋಪಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಜಾಮೀನು ನೀಡಬಾರದು ಎಂದು ಎಸ್ ಐಟಿ ಪರ ವಕೀಲರು ವಾದ ಮಂಡಿಸಿದ್ದಾರೆ. ಆರೋಪಿ ಮಹಿಳೆ ಪ್ರಕರಣದಲ್ಲಿ ನೇರವಾಗಿ ಸಂಬಂಧ ಹೊಂದಿದ್ದಾರೆ. ಅತ್ಯಾಚಾರ ಎಸಗಿದ ಆರೋಪಿಯ ತಾಯಿ ಕೂಡ ಆಗಿದ್ದಾರೆ. ಆರೋಪಿಗಳು ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದವರು. ಹೀಗಾಗಿ ನಿರೀಕ್ಷಣಾ ಜಾಮೀನು ರದ್ದು ಮಾಡಬೇಕು ಎಂದು ಎಸ್ ಐಟಿ ಅಧಿಕಾರಿಗಳ ಪರ ವಕೀಲರು ವಾದ ಮಂಡಿಸಿದ್ದರು.
ಪ್ರಕರಣದ ಪ್ರಮುಖರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಆರೋಪಿ ಮಗ ಮತ್ತು ಪತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಜಾಮೀನು ರದ್ದು ಮಾಡಲು ಯಾವುದೇ ಸಕಾರಣ ಕಾಣುತ್ತಿಲ್ಲ. ಪ್ರತಿಷ್ಠಿತ ರಾಜಕೀಯ ಕುಟುಂಬ ಎಂದು ಜಾಮೀನು ರದ್ದು ಮಾಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಏಪ್ರಿಲ್ ನಲ್ಲಿ ಬಹಿರಂಗವಾಗಿದ್ದವು. ಆ ವಿಡಿಯೋದಲ್ಲಿ ತನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆಯ ಪುತ್ರ ದೂರು ನೀಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ. ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿತ್ತು.