ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರವು ಶಾಸಕ ಡಿ. ಸುಧಾಕರ್ ಅವರ ನಿಧನದಿಂದ ತೆರವಾಗಿದ್ದು, ಉಪಚುನಾವಣೆಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಎನ್ಡಿಎ ಮೈತ್ರಿಕೂಟದೊಳಗೆ ಅಭ್ಯರ್ಥಿ ಆಯ್ಕೆ ಕುರಿತ ಚರ್ಚೆಗಳು ತೀವ್ರಗೊಂಡಿದ್ದು, ಈ ಬಾರಿ ಜೆಡಿಎಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.
ದಾವಣಗೆರೆ ಹಾಗೂ ಬಾಗಲಕೋಟೆ ಸೇರಿದಂತೆ ಇತ್ತೀಚಿನ ಉಪಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಜೆಡಿಎಸ್ ಬೆಂಬಲ ನೀಡಿದ್ದನ್ನು ಮುಂದಿಟ್ಟು, ಇದೀಗ ಹಿರಿಯೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಬೇಕು ಎಂಬ ಬೇಡಿಕೆ ಪಕ್ಷದೊಳಗೆ ಬಲವಾಗಿ ಕೇಳಿಬರುತ್ತಿದೆ ಎನ್ನಲಾಗಿದೆ.
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ವಿಚಾರದಲ್ಲೂ ಜೆಡಿಎಸ್ ಮೌನ ವಹಿಸಿದ್ದ ಹಿನ್ನೆಲೆಯಲ್ಲೂ ಈ ಕ್ಷೇತ್ರದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟಿದೆ.
ಈಗಾಗಲೇ ಹಿರಿಯೂರಿನ ಸ್ಥಳೀಯ ಜೆಡಿಎಸ್ ಮುಖಂಡರ ಸಭೆ ನಡೆಸಿರುವ ಕುಮಾರಸ್ವಾಮಿ, ಟಿಕೆಟ್ ತರುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ, ಈ ಸಂಬಂಧ ಬಿಜೆಪಿ ಹೈಕಮಾಂಡ್ಗೂ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿರುವುದಾಗಿ ಮೂಲಗಳು ಹೇಳುತ್ತಿವೆ.
ಇನ್ನೊಂದೆಡೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಹೆಚ್ಚು ಮತ ಪಡೆದಿದ್ದರು ಎಂಬ ಅಂಶವನ್ನು ಮುಂದಿಟ್ಟು ಬಿಜೆಪಿ ಕೂಡ ತನ್ನ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಸಜ್ಜಾಗಿದೆ. ಇದೇ ಕಾರಣವನ್ನು ಆಧಾರವಾಗಿಸಿಕೊಂಡು ಬಿಜೆಪಿ ನಾಯಕರು ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!



















