ಬೆಂಗಳೂರು: ರಾಜ್ಯ ಸರ್ಕಾರವು ಶೇ. 15ರಷ್ಟು ಬಸ್ ಟಿಕೆಟ್ ದರ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರೊಂದಿಗೆ ವಿರೋಧ ಪಕ್ಷಗಳು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿವೆ.
ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವ ಮುಖವಿಟ್ಟುಕೊಂಡು ನೀವು ರಾಜ್ಯದ ಜನತೆಗೆ ಪಂಚಭಾಗ್ಯ ಯೋಜನೆಯನ್ನು ಕೊಟ್ಟಿದ್ದೇವೆ ಎಂದು ಜಂಬ ಕೊಚ್ಚಿಕೊಳ್ಳುತ್ತೀರಿ.? ಶಕ್ತಿ ಯೋಜನೆಗೆ ಹಣ ಒದಗಿಸಲು ವಿಫಲವಾಗಿರುವ ನೀವು, ಸಾರಿಗೆ ಸಂಸ್ಥೆ ನಷ್ಟದ ಹಾದಿ ತುಳಿಯಲು ಕಾರಣರಾಗಿದ್ದೀರಿ. ಮಹಿಳೆಯರಿಗೆ ಉಚಿತ ಪ್ರಯಾಣ ಪುರುಷರಿಗೆ ಅದರ ಹೊರೆ ಖಚಿತ ಎಂದು ಲೇವಡಿ ಮಾಡಿದ್ದಾರೆ.
ಶೇ 15% ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಿದ್ದೀರಿ. ಶಕ್ತಿ ಯೋಜನೆ ಹೇಗಾಗಿದೆ ಎಂದರೆ, ವಾಣಿಜ್ಯ ಉತ್ಪನ್ನಗಳ ಮಾರಾಟ ಆಕರ್ಷಣೆಗೆ ಮಳಿಗೆಗಳಲ್ಲಿ Buy-1 Get-1 (ಒಂದು ಖರೀದಿಸಿದರೆ-ಒಂದು ಉಚಿತ) ಬೋರ್ಡ್ ಪ್ರದರ್ಶಿಸುವ ಮಾದರಿಯಲ್ಲಿ ರಾಜ್ಯದ ಜನರಿಗೆ ಟೋಪಿ ಹಾಕಲು ಹೊರಟಿದ್ದೀರಿ. ಶೇ.15 ರಷ್ಟು ಸಾರಿಗೆ ದರ ಹೆಚ್ಚಳದ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅವೈಜ್ಞಾನಿಕ ಹಾಗೂ ಜನವಿರೋಧಿಯಾಗಿದೆ. ಇದನ್ನು ವಿರೋಧಿಸಿ ಬಿಜೆಪಿ ಜನರ ಪರ ಧ್ವನಿ ಎತ್ತಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.