ವಿಜಯಪುರ : ನಗರದ ಹೊರವಲಯದಲ್ಲಿರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಆರು ಮಂದಿಯ ಶವಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರಲ್ಲಿ ಇಬ್ಬರು ಮಕ್ಕಳು ಹಾಗೂ ನಾಲ್ವರು ಮಹಿಳೆಯರಿದ್ದು, ಮೃತರ ಹೆಸರು ಹಾಗೂ ವಿಳಾಸ ಇನ್ನೂ ಪತ್ತೆಯಾಗಿಲ್ಲ.
ಕೆರೆಯ ಅಂಚಿನಲ್ಲಿ ಶವಗಳು ತೇಲಿ ಬಂದಿರುವುದನ್ನು ಗಮನಿಸಿದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ನಗರ ಡಿವೈಎಸ್ಪಿ ನಾಗರಾಜ್, ಆದರ್ಶ ನಗರ ಪಿಎಸ್ಐ ಸೀತಾರಾಮ ಲಮಾಣಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರತೆಗೆಯುತ್ತಿದ್ದಾರೆ.
ಆರು ಮಂದಿ ಕೆರೆಗೆ ಹೇಗೆ ಬಿದ್ದರು ಎಂಬ ಬಗ್ಗೆ ಸದ್ಯಕ್ಕೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಕೆರೆ ನೋಡಲು ಬಂದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಘಟನೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಮೃತರ ಗುರುತು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದು, ಅವರ ಕುಟುಂಬಸ್ಥರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಪೊಲೀಸ್ ತನಿಖೆ ಹಾಗೂ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕವೇ ಆರು ಮಂದಿಯ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.
ಇದನ್ನೂ ಓದಿ : ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್ ಫ್ಯಾನ್ಸ್ ಸಂಭ್ರಮ!


















