ಬೆಳಗಾವಿ : ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ ಆರು ಜನರನ್ನು ಝೀರೋ ಟ್ರಾಫಿಕ್ನಲ್ಲಿಯೇ ಬೈಲಹೊಂಗಲದಿಂದ ಬೆಳಗಾವಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಕ್ರಮ ಇನಾಮದಾರ್ಗೆ ಸೇರಿದ ಸಕ್ಕರೆ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದೆ.
ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ ಆಡಳಿತ ಮಂಡಳಿ |
ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಭರವಸೆ ನೀಡಿದೆ. ಗಾಯಗೊಂಡ ಕಾರ್ಮಿಕರ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ವೆಚ್ಚವನ್ನು ಕಾರ್ಖಾನೆಯೇ ಭರಿಸಲಿದೆ ಎಂದು ತಿಳಿಸಿದೆ. ಇತ್ತ, ಕೈಗಾರಿಕಾ ಸುರಕ್ಷತಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಯ್ಲರ್ನ ತಾಂತ್ರಿಕ ಸ್ಥಿತಿ, ನಿರ್ವಹಣಾ ದಾಖಲೆಗಳು ಹಾಗೂ ಸುರಕ್ಷತಾ ಮಾನದಂಡಗಳ ಪಾಲನೆಯ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಇನ್ನು, ಸ್ಥಳೀಯರು ಮತ್ತು ಕಾರ್ಮಿಕ ಸಂಘಟನೆಗಳು ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಖಾನೆಯಲ್ಲಿ ಸುರಕ್ಷತಾ ಕ್ರಮಗಳು ಸರಿಯಾಗಿ ಪಾಲಿಸಲಾಗುತ್ತಿಲ್ಲ ಎಂಬ ಆರೋಪಗಳನ್ನು ಮಾಡಿದ್ದಾರೆ. ಕಾರ್ಮಿಕರ ಪ್ರಾಣಾಪಾಯಕ್ಕೆ ಕಾರಣವಾಗಿರುವ ನಿರ್ಲಕ್ಷ್ಯದ ಕುರಿತು ಸಮಗ್ರ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ ಕೇಸ್ | ನಾಲ್ವರ ಬಂಧನ



















