ಬೆಂಗಳೂರು: ನನ್ನನ್ನು ಅಕ್ರಮವಾಗಿ ಬಂಧಿಸಿ ಅಲೆದಾಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಪ ಸದಸ್ಯ ಸಿ.ಟಿ. ರವಿ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಗೆ ದೂರು ನೀಡಿದ್ದಾರೆ.
ಈ ಕುರಿತು ಸಿಟಿ ರವಿ 8 ಪುಟಗಳ ದೂರು ನೀಡಿದ್ದಾರೆ. ಡಿಜಿಪಿ ಕಚೇರಿಗೆ ಭೇಟಿ ನೀಡಿ ಇಂದು ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬೆಳಗಾವಿ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮತ್ತು ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ವಿರುದ್ಧ ಆರೋಪ ಮಾಡಿದ್ದಾರೆ.
ಪಶುವಿನ ರೀತಿ ಕಿಡ್ನ್ಯಾಪ್ ಮಾಡಿದ್ದಾರೆಂದು ಬೆಳಗಾವಿ ಪೊಲೀಸ್ ಕಮಿಷನರ್, ಎಸ್ಪಿ ವಿರುದ್ಧ ಸಿ.ಟಿ.ರವಿ ಆರೋಪ ಮಾಡಿದ್ದಾರೆ. ಸನ್ನಿವೇಶ ಫೇಕ್ ಎನ್ಕೌಂಟರ್ ರೀತಿ ಇತ್ತು. ಲೈಸೆನ್ಸ್ಡ್ ಸುಪಾರಿ ಕಿಲ್ಲರ್ಗಳ ರೀತಿ ಇತ್ತು ಎಂದು ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿ.ಟಿ. ರವಿ, ನನ್ನನ್ನು ಅಕ್ರಮವಾಗಿ ಬಂಧಿಸಿ, ದೂರುಕೊಟ್ಟ ಬಳಿಕವೂ ಎಫ್ಐ ಆರ್ ಹಾಕದೆ ನನ್ನ ಮೇಲೆ ದೌರ್ಜನ್ಯವೆಸಗಿ, ಕೆಲವು ಪ್ರಭಾವಿ ವ್ಯಕ್ತಿಗಳ ನಿದರ್ಶನದಂತೆ ರಾತ್ರಿ ಇಡೀ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡಿಸಿ, ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾಡಿದ ಪೊಲೀಸ್ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಬಿಜೆಪಿ ನಿಯೋಗದೊಂದಿಗೆ ತೆರಳಿ ದೂರು ನೀಡಲಾಗಿದೆ ಎಂದಿದ್ದಾರೆ.