ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವ ಸ್ಥಾನಗಳ ಸಂಭಾವ್ಯ ಪಟ್ಟಿಯ ಕುರಿತು ಸುದೀರ್ಘ ಸಮಾಲೋಚನೆ ನಡೆದಿದ್ದು, ಅಂತಿಮ ಪಟ್ಟಿಯನ್ನು ಇನ್ನೆರಡು-ಮೂರು ದಿನಗಳಲ್ಲಿ ಸಿದ್ಧಪಡಿಸಿ ಕಳುಹಿಸುವುದಾಗಿ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಭಾಗದಿಂದ ಲಕ್ಷ್ಮಣ ಸವದಿ, ಲಕ್ಷ್ಮೀ ಹೆಬ್ಬಾಳ್ಕರ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್, ಬಸವರಾಜ್ ರಾಯರೆಡ್ಡಿ, ಶಿವರಾಜ್ ತಂಗಡಗಿ, ಎಚ್.ಕೆ. ಪಾಟೀಲ್, ಅಜಯ್ ಸಿಂಗ್ ಹಾಗೂ ಶ್ರೀನಿವಾಸ್ ಮಾನೆ ಅವರ ಹೆಸರುಗಳು ಮುಂಚೂಣಿಯಲ್ಲಿವೆ.
ಬೆಂಗಳೂರು ಭಾಗದಿಂದ ಜಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ಎಂ. ಕೃಷ್ಣಪ್ಪ ಹಾಗೂ ಹೊಸಕೋಟೆಯ ಶರತ್ ಬಚ್ಚೇಗೌಡ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹಳೆಯ ಮೈಸೂರು ಭಾಗದಿಂದ ಪುಟ್ಟರಂಗಶೆಟ್ಟಿ, ತನ್ವೀರ್ ಸೇಠ್, ಚಲುವರಾಯಸ್ವಾಮಿ ಹಾಗೂ ಟಿ.ಬಿ. ಜಯಚಂದ್ರ ಅವರ ಹೆಸರುಗಳೂ ಚರ್ಚೆಯಲ್ಲಿವೆ.
ಹೈಕಮಾಂಡ್ ಪ್ರಾದೇಶಿಕ ಸಮತೋಲನ, ಜಾತಿ ಸಮೀಕರಣ ಹಾಗೂ ಪಕ್ಷ ಸಂಘಟನೆಯನ್ನು ಪ್ರಮುಖ ಮಾನದಂಡವಾಗಿಟ್ಟುಕೊಂಡು ಅಂತಿಮ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ ಎನ್ನಲಾಗಿದೆ. ಹಿರಿಯ ನಾಯಕರ ಜೊತೆಗೆ ಯುವ ನಾಯಕರಿಗೂ ಸಚಿವ ಸ್ಥಾನ ನೀಡುವ ಸಾಧ್ಯತೆ ಇದ್ದು, ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಮುಖಗಳಿಗೂ ಅವಕಾಶ ನೀಡುವ ಚಿಂತನೆ ನಡೆದಿದೆ. ಅಂತಿಮವಾಗಿ ಯಾರಿಗೆ ಮಂತ್ರಿಗಿರಿ ಒಲಿಯಲಿದೆ ಎಂಬುದು ಕಾಂಗ್ರೆಸ್ ಹೈಕಮಾಂಡ್ನ ಅಂತಿಮ ನಿರ್ಧಾರದ ಮೇಲೆ ಅವಲಂಬಿತವಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಇದನ್ನೂ ಓದಿ : ಭುಗಿಲೆದ್ದ ಕಾವೇರಿ ಕಿಚ್ಚು : ಇಂದು ಬಿಜೆಪಿಯಿಂದ KRSಗೆ ಮುತ್ತಿಗೆ.. ಪೊಲೀಸರಿಂದ ಬಿಗಿ ಭದ್ರತೆ!



















