ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಚಿವ ಸಂಪುಟ ವಿಸ್ತರಣೆ ಮತ್ತು ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.
ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ದೆಹಲಿಗೆ ತೆರಳಲಿದ್ದಾರೆ. ಮಧ್ಯಾಹ್ನದ ವೇಳೆಗೆ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ನಡೆಯುವ ನಿರೀಕ್ಷೆಯಿದೆ.
ಇದರ ನಡುವೆ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ದೆಹಲಿಗೆ ತಲುಪುವ ಮೊದಲೇ ಹಲವು ಕಾಂಗ್ರೆಸ್ ಶಾಸಕರು ರಾಜಧಾನಿಯಲ್ಲಿ ಬೀಡುಬಿಟ್ಟಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಶಾಸಕರು ದೆಹಲಿಯಲ್ಲಿದ್ದು, ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಕಸರತ್ತು ನಡೆಸುತ್ತಿದ್ದಾರೆ.
ಸಭೆ ಆರಂಭಕ್ಕೂ ಮುನ್ನವೇ ಹೈಕಮಾಂಡ್ ಭೇಟಿಗೆ ಶಾಸಕರು ಪ್ರಯತ್ನಿಸುತ್ತಿದ್ದು, ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಯುತ್ತಿದೆ ಎನ್ನಲಾಗಿದೆ. ಇಂದಿನ ಸಭೆಯ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ತೀರ್ಮಾನ ಹೊರಬೀಳುವ ನಿರೀಕ್ಷೆ ಇದೆ.
ಇದನ್ನೂ ಓದಿ : 100 ವರ್ಷದಲ್ಲೇ ಗರಿಷ್ಠ ತಾಪಮಾನ.. ಬಿಸಿಲಿಗೆ ಬೆಂದ ಬೆಂಗಳೂರು!



















