ಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗುತ್ತಿದ್ದಂತೆಯೇ, ಇತ್ತ ಸಚಿವ ಸಂಪುಟ ಸೇರಲು ಆಕಾಂಕ್ಷಿ ಶಾಸಕರ ಭರ್ಜರಿ ಲಾಬಿ ಮತ್ತು ಕಸರತ್ತು ಶುರುವಾಗಿದೆ. ಇಂದು ಕೈ ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಬಹುತೇಕ ಇಂದು ಸಂಜೆಯ ವೇಳೆಗೆ ಸಚಿವರ ಅಂತಿಮ ಪಟ್ಟಿ ಸಿದ್ಧವಾಗುವ ಸಾಧ್ಯತೆಯಿದೆ.
ಎಐಸಿಸಿ (AICC) ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅವರ ಅಧಿಕೃತ ನಿವಾಸದಲ್ಲಿ ಈ ಸಭೆ ನಡೆಯಲಿದೆ. ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ.
ಹೊಸ ಸರ್ಕಾರದ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಚಟುವಟಿಕೆಗಳು ಗರಿಗೆದರಿರುವ ಹಿನ್ನೆಲೆಯಲ್ಲಿ, ಕಳೆದ ಒಂದು ವಾರದಿಂದ ಅನೇಕ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿದ್ದಾರೆ. ಸಚಿವ ಸ್ಥಾನಕ್ಕಾಗಿ ತಮ್ಮ ಅರ್ಹತೆ, ರಾಜಕೀಯ ಅನುಭವ ಮತ್ತು ಕ್ಷೇತ್ರದ ಪ್ರಾತಿನಿಧ್ಯದ ಕುರಿತು ಪಕ್ಷದ ವರಿಷ್ಠರ ಮುಂದೆ ಮನವರಿಕೆ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಂದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ. ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡರೆ ಪಕ್ಷಕ್ಕೆ ಹೇಗೆ ಲಾಭವಾಗಲಿದೆ ಎಂಬುದನ್ನು ವಿವರಿಸುವ ಪ್ರಯತ್ನವನ್ನೂ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸಂಭಾವ್ಯ ಸಚಿವರ ಪಟ್ಟಿ
- ಡಾ.ಜಿ.ಪರಮೇಶ್ವರ್
- ಯು.ಟಿ.ಖಾದರ್
- ಸತೀಶ್ ಜಾರಕಿಹೊಳಿ
- ಡಾ.ಯತೀಂದ್ರ
- ಬೈರತಿ ಸುರೇಶ್
- ಎಚ್.ಕೆ. ಪಾಟೀಲ್
- ಪ್ರಿಯಾಂಕ್ ಖರ್ಗೆ
- ರಾಮಲಿಂಗಾರೆಡ್ಡಿ
- ಎಂ.ಬಿ.ಪಾಟೀಲ್
- ಕೆಜೆ ಜಾರ್ಜ್
- ಈಶ್ವರ್ ಖಂಡ್ರೆ
- ಕೃಷ್ಣಬೈರೇಗೌಡ
ಇದನ್ನೂ ಓದಿ : ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ


















