ಗಂಗಾವತಿ : ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಗಂಗಾವತಿಯಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಮಳೆಯ ಕೊರತೆ ಇರುವ ಈ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವುದು ರಾಜ್ಯದ ರೈತರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮನವಿ ಸಲ್ಲಿಸಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೊಪ್ಪಳ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ ಅವರು, ರಾಜ್ಯದಲ್ಲಿ ಈ ವೇಳೆಗೆ ಸುಮಾರು ಶೇ.70ರಷ್ಟು ಮುಂಗಾರು ಮಳೆಯಾಗಬೇಕಿದ್ದರೂ ಕೇವಲ ಶೇ.20ರಷ್ಟು ಮಾತ್ರ ಮಳೆಯಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದರು.

ತುಂಗಭದ್ರಾ ಜಲಾಶಯದಲ್ಲೂ ಇನ್ನೂ ಭಾಗಶಃ ಮಾತ್ರ ನೀರು ಸಂಗ್ರಹವಾಗಿದ್ದು, ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವಷ್ಟು ನೀರು ಲಭ್ಯವಿಲ್ಲ. ಆದ್ದರಿಂದ ಕೈಗಾರಿಕೆಗಳು ಹಾಗೂ ಕಾರ್ಖಾನೆಗಳಿಗೆ ಕದ್ದುಮುಚ್ಚಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಿ, ಲಭ್ಯವಿರುವ ನೀರನ್ನು ಮೊದಲು ರಾಜ್ಯದ ರೈತರ ಕೃಷಿ ಭೂಮಿಗಳಿಗೆ ಹಾಗೂ ಜಾನುವಾರುಗಳ ಅಗತ್ಯಗಳಿಗೆ ಬಳಸುವಂತೆ ಮುಖ್ಯಮಂತ್ರಿ ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳಿಗೆ ತಕ್ಷಣವೇ ಸೂಕ್ತ ನಿರ್ದೇಶನ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರಾದ ಶಂಕರ ಪೂಜಾರಿ, ಹುಸೇನಸಾಬ್, ಉಮೇಶ್ ಬಂಡಿ, ಮುತ್ತುರಾಜ್, ಬಸವರಾಜ್, ಅಂಜಿ ನಾಯಕ, ಪುಂಡಲಿಕ, ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ರಾಜ್ಯದ ನೀರಿನ ಹಿತಾಸಕ್ತಿ ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು.
ಇದನ್ನೂ ಓದಿ : ಸ್ವಿಗ್ಗಿ ವಿರುದ್ದ ಸಿಡಿದೆದ್ದ ಹೋಟೆಲ್ ಅಸೋಸಿಯೇಷನ್ ; ಆ.15ರಿಂದ ಹೊಟೇಲ್ಗಳಲ್ಲಿ ಸರ್ವಿಸ್ ಬಂದ್?!



















