ಬೆಂಗಳೂರು: ಯಾದಗಿರಿ ಪಿಎಸ್ ಐ ಪರಶುರಾಮ್ ಸಾವಿನ ಸುದ್ದಿ ರಾಜ್ಯದಲ್ಲಿ ಭಾರೀ ಸದ್ದು ಮಾಡಿತ್ತು. ಈ ಘಟನೆ ಮಾಸುವ ಮುನ್ನವೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಮನಗರ ಜಿಲ್ಲೆಯ ಬಿಡದಿ ಹತ್ತಿರ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಮ್ಮೇಗೌಡ ಅವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ತಿಮ್ಮೇಗೌಡ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.
ವ್ಯಕ್ತಿಯೊಬ್ಬರ ದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಬಿಡದಿ ಸಮೀಪ ಸೋಮವಾರ ಪತ್ತೆಯಾಗಿತ್ತು. ಈ ಕುರಿತು ಸ್ಥಳೀಯರು ಬಿಡದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ನಂತರ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಎಂಬುವುದು ಗೊತ್ತಾಗಿದೆ.
ತಿಮ್ಮೇಗೌಡ ಸುಮಾರು 20 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಬೆಂಗಳೂರು, ರಾಮನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲಸ ಮಾಡಿದ್ದಾರೆ. ತಿಂಗಳುಗಳ ಹಿಂದಷ್ಟೇ ಅವರು ಸಿಸಿಬಿ ಆರ್ಥಿಕ ವಿಭಾಗಕ್ಕೆ ವರ್ಗಾವಣೆಯಾಗಿದ್ದರು ಎಂದು ಬಿಡದಿ ಪೊಲೀಸರು ಹೇಳಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಆ ನಂತರದಲ್ಲಿ ಪಿಎಸ್ ಐ ಪರಶುರಾಮ್ ಸಾವು ಕೂಡ ಬಹಳಷ್ಟು ಸದ್ದು ಮಾಡುತ್ತಿದೆ. ಈಗ ಸಿಸಿಬಿ ಇನ್ಸ್ ಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.