ಬೆಂಗಳೂರು: ರಾಜ್ಯಗಳ ಅಭಿವೃದ್ಧಿ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಮತ್ತು ಬಂಡವಾಳ ವೆಚ್ಚ ವೇಗಗೊಳಿಸಲು ಹಾಗೂ ಮುಂಬರುವ ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ. ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಅ. 10ರಂದು ಬಿಡುಗಡೆಯಾಗಬೇಕಿದ್ದ ಸಾಮಾನ್ಯ ಮಾಸಿಕ 81,735 ಕೋಟಿ ರೂ.ಗಳ ತೆರಿಗೆ ಜೊತೆಗೆ ಹೆಚ್ಚುವರಿಯಾಗಿ 1,01,603 ಕೋಟಿ ರೂ ತೆರಿಗೆ ಹಂಚಿಕೆ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ದೇಶದ ಜನತೆಗೆ Next Gen GST ಕೊಡುಗೆ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ದಸರಾ-ದೀಪಾವಳಿ ಹಬ್ಬದ ವೇಳೆ ಹೆಚ್ಚುವರಿ ತೆರಿಗೆ ಹಂಚಿಕೆಯ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ದಸರಾ-ದೀಪಾವಳಿ ಹಬ್ಬಗಳಲ್ಲಿ ಕೇಂದ್ರ ಸರ್ಕಾರ ಮಹತ್ತರ ನಿರ್ಣಯ ಕೈಗೊಂಡು ಎಲ್ಲಾ ರಾಜ್ಯಗಳಿಗೂ ನೆರವಾಗುವಂತೆ ತೆರಿಗೆ ಹಂಚಿಕೆಯ ಒಂದು ಮುಂಗಡ ಕಂತು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 3705 ಕೋಟಿ ರೂ. ಹೆಚ್ಚುವರಿ ತೆರಿಗೆ ಪಾಲನ್ನು ಒದಗಿಸಲಾಗಿದೆ. ರಾಜ್ಯಗಳ ಬಂಡವಾಳ ವೆಚ್ಚವನ್ನು ವೇಗಗೊಳಿಸಲು ಹಾಗೂ ಅಭಿವೃದ್ಧಿ, ಕಲ್ಯಾಣ ಕಾರ್ಯಗಳ ವೆಚ್ಚಕ್ಕೆ ಆರ್ಥಿಕ ನೆರವು ಒದಗಿಸುವಲ್ಲಿ ಕೇಂದ್ರ ಸರ್ಕಾರ ದೇಶದ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಒಟ್ಟಾರೆ 1,01,603 ಕೋಟಿ ರೂ. ತೆರಿಗೆ ಹಂಚಿಕೆಯನ್ನು ಮುಂಗಡ ಕಂತಾಗಿ ಬಿಡುಗಡೆ ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೇ ವಿಶೇಷವಾಗಿ ಕರ್ನಾಕಟದ ರೈತರಿಗಾಗಿಯೇ ಬೆಂಬಲ ಬೆಲೆಯಲ್ಲಿ ಹೆಸರು, ಉದ್ದಿನಕಾಳು, ಸೋಯಾಬಿನ್ ಮತ್ತು ಶೇಂಗಾ ಖರೀದಿಗೆ ಸೂಚಿಸಿದ್ದ ಕೇಂದ್ರ ಸರ್ಕಾರ, ಇದೀಗ ಹಿಂಗಾರು ಹಂಗಾಮಿನ ದ್ವಿದಳ ಧಾನ್ಯಗಳು ಸೇರಿದಂತೆ ವಿವಿಧ ಬೆಳೆಗಳ ಬೆಂಬಲ ಬೆಲೆಯನ್ನೂ ಹೆಚ್ಚಿಸಿ ರೈತರ ನೆರವಿಗೆ ಬಂದಿದೆ.
ಮುಂಬರುವ ಹಿಂಗಾರು ಹಂಗಾಮಿನ ಮಾರುಕಟ್ಟೆಯಲ್ಲಿ ಖರೀದಿಸುವ ಗೋಧಿ, ಕುಸುಬೆ, ಬಾರ್ಲಿ, ಮಸೂರ್, ಸಾಸಿವೆ, ಕಡಲೆ ಹೀಗೆ ವಿವಿಧ ಧಾನ್ಯಗಳಿಗೆ ಕೇಂದ್ರ ಸರ್ಕಾರ ಈ ಬಾರಿ ಅತಿ ಹೆಚ್ಚಿನ ಬೆಂಬಲ ಬೆಲೆಯನ್ನು ಘೋಷಿಸಿದೆ. ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಇದರ ಲಾಭವನ್ನು ಸಮರ್ಪಕವಾಗಿ ಒದಗಿಸುವ ಕೆಲಸ ಮಾಡಲಿ ಎಂದು ಹೇಳಿದ್ದಾರೆ.



















