ಉಡುಪಿ: ಜಿಲ್ಲೆಯ ಬೈಂದೂರಿನಲ್ಲಿರುವ ತಾಲ್ಲೂಕು ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆ ಕುರಿತು ಮಾತನಾಡಿದ ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಗಜೇಂದ್ರ ಎಸ್ ಬೇಲೆಮನೆ, ತಾಲ್ಲೂಕಿನ ಆರೋಗ್ಯ ಕ್ಷೇತ್ರದಲ್ಲಿರುವ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹಿಸಿದ್ದಾರೆ.
ಪತ್ರಿಕಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇವರು “ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಇವತ್ತು ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳಿಗೆ ಕುಂದುಕೊರತೆಗಳಾಗುತ್ತಿವೆ. ಅದರಲ್ಲಿ ಮುಖ್ಯವಾಗಿ ಸರ್ಕಾರಿ ಉಪ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸೇವೆ, ಸಿಬ್ಬಂದಿ ಮತ್ತು ವೈದ್ಯರ ವ್ಯವಸ್ಥೆಯಲ್ಲಿ ಗಣನೀಯ ಮಟ್ಟದಲ್ಲಿ ಕೊರತೆಯಾಗುತ್ತಿದೆ.
ಬೈಂದೂರು ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆಗೆ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ವೈದ್ಯರು ಹಾಗೂ ಸಿಬ್ಬಂದಿ ಕೊರತೆ, ನಿರ್ವಹಣೆಯ ಕೊರತೆ, ಮತ್ತು ಅಗತ್ಯ ಸೌಲಭ್ಯಗಳಿಲ್ಲದ ಶಸ್ತ್ರಚಿಕಿತ್ಸಾ ಕೊಠಡಿ, ತುರ್ತು ನಿಗಾ ಘಟಕಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಇರುವುದರಿಂದಾಗಿ, ಉಚಿತ ವೈದ್ಯಕೀಯ ಸೇವೆಗಳನ್ನು ಪಡೆಯುವಲ್ಲಿ ನಾಗರಿಕರು ತೊಂದರೆ ಎದುರಿಸುತ್ತಿದ್ದಾರೆ.
ಇದರಿಂದ ರೋಗಿಗಳು ಖಾಸಗಿ ಆಸ್ಪತ್ರೆಗಳ ಕಡೆ ತೆರಳಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ಆಸ್ಪತ್ರೆಗಳಲ್ಲಿ ಲ್ಯಾಬ್ ನಿರ್ವಹಣೆಗೆ ತಾಂತ್ರಿಕ ತಜ್ಞರನ್ನು ನೇಮಿಸಬೇಕು ಮತ್ತು ಅತ್ಯಾಧುನಿಕ ತುರ್ತು ನಿಗಾ ಘಟಕಗಳ ವ್ಯವಸ್ಥೆ ಮಾಡಬೇಕು. ಜೊತೆಗೆ ತಾಲ್ಲೂಕು ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಬಡರೋಗಿಗಳಿಗೆ ಸಹಾಯ ಮಾಡಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.
ಈ ಎಲ್ಲಾ ಸಮಸ್ಯೆಗಳನ್ನು ಆದಷ್ಟು ಬೇಗ ಸರಿಪಡಿಸಿ ಜನರಿಗೆ ನೆರವಾಗಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ದ ಬೈಂದೂರು ತಾಲೂಕು ಬಿ.ಜೆ.ಪಿ ಯುವ ಮೋರ್ಚಾ ವತಿಯಿಂದ ತೀವ್ರ ಸ್ವರೂಪದ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ”.
ಇನ್ನು ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರದೀಪ್ ಉಪ್ಪುಂದ, ಜಗದೀಶ್ ಆಲoದೂರು, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಆಜ್ರಿ, ಬೈಂದೂರು ಬಿಜೆಪಿ ಮಂಡಲ ಕಾರ್ಯದರ್ಶಿ ರಾಜೇಂದ್ರ ಬಿಜೂರು ಉಪಸ್ಥಿತರಿದ್ದರು.
ಇದನ್ನೂ ಓದಿ : ವಿಲನ್ ಟಾರ್ಚರ್ಗೆ ದೊಡ್ಮನೆ ಅಲ್ಲೋಲ-ಕಲ್ಲೋಲ | ಕಾವ್ಯ ಆಯ್ತು, ರಜತ್ ಆಯ್ತು ಈಗ ಮಾಳುನಾ?



















