ಬೆಂಗಳೂರು: ನಗರದ ವೈಟ್ಫೀಲ್ಡ್ನಲ್ಲಿ ತಾಯಿಯ ಮೇಲಿನ ದ್ವೇಷಕ್ಕೆ ಆರು ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಲೆಮಾಡಿ, ಚರಂಡಿಗೆ ಬಿಸಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಕೊಲೆಗೂ ಮುನ್ನ ಪುಟ್ಟ ಮಗುವಿನ ಮೇಲೆ ಆರೋಪಿ ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ.
ಬಾಲಕಿಯ ಕೊಲೆ ಪ್ರಕರಣದಲ್ಲಿ ಯುಸೂಫ್ ಮೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ತಾಯಿಯೊಂದಿಗೆ ಜಗಳ ಮಾಡಿಕೊಂಡಿದ್ದ ಆರೋಪಿಯು ಮಗುವನ್ನು ಕಿಡ್ನಾಪ್ ಮಾಡಿದ್ದ. 6 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿದ್ದ ಪಾಪಿ, ನಂತರ ಪ್ಲಾಸ್ಟಿಕ್ ವೈರ್ ಬಳಸಿ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ. ಕೊಲೆ ಬಳಿಕ ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ರಸ್ತೆ ಬದಿಯ ಚರಂಡಿಗೆ ಎಸೆದಿದ್ದಾನೆ ಎಂದು ತನಿಖೆಯಲ್ಲಿ ದೃಢಪಟ್ಟಿದೆ.
ಬಾಲಕಿ ನಾಪತ್ತೆಯಾದ ಒಂದು ದಿನದ ಬಳಿಕ ಪೋಷಕರು ದೂರು ನೀಡಿದ್ದು, ದೂರು ದಾಖಲಾದ ಹನ್ನೆರಡು ಗಂಟೆಗಳೊಳಗೆ ರಸ್ತೆ ಬದಿಯ ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ಪತ್ತೆಯಾಗಿತ್ತು. ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದ್ದು, ಆರಂಭದಲ್ಲಿ ಕೊಲೆ ಮಾತ್ರ ನಡೆದಿರುವ ಅನುಮಾನ ಇತ್ತು. ಆದರೆ ತನಿಖೆಯಲ್ಲಿ ಅತ್ಯಾಚಾರ ಬಳಿಕ ಕೊಲೆ ನಡೆದಿರುವುದು ತಿಳಿದು ಬಂದಿದೆ.
ಇದನ್ನೂ ಓದಿ: ಕೌಟುಂಬಿಕ ಕಲಹ | ಕಾರಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ BJP ಮುಖಂಡ



















