ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಇಂದು ಬೆಳಗ್ಗೆ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ತೆರವು ಕಾರ್ಯಾಚರಣೆ ಆರಂಭಿಸಿದ್ದು, ಹಲವು ಅಂಗಡಿ-ಮುಂಗಟ್ಟುಗಳನ್ನು ತೆರವುಗೊಳಿಸಲಾಗಿದೆ.
ಬೆಳ್ಳಂಬೆಳಿಗ್ಗೆಯೇ JCB ಯಂತ್ರಗಳ ಮೂಲಕ ನಡೆದ ಈ ಕಾರ್ಯಾಚರಣೆ ನಗರದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ. ನೋಟಿಸ್ ನೀಡಿದ ಬಳಿಕವೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ, ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿರುವುದಾಗಿ ಆರೋಪಿಸಿರುವ ಅಂಗಡಿ ವರ್ತಕರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಗೆ ಇನ್ನಷ್ಟು ಸಮಯಾವಕಾಶ ನೀಡಬೇಕು ಎಂದು ವ್ಯಾಪಾರಿಗಳು ಮನವಿ ಮಾಡಿದ್ದಾರೆ.
ಇದೇ ವೇಳೆ ಸ್ಥಳೀಯ ಶಾಸಕ ಟಿ. ರಘುಮೂರ್ತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಾಸಕರು ನಿಯಮ ಉಲ್ಲಂಘನೆ ಮಾಡಿ “ಹಿಟ್ಲರ್ ಆಡಳಿತ” ನಡೆಸುತ್ತಿದ್ದಾರೆ ಹಾಗೂ ವರ್ತಕರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ ಕೂಡ ಅಸಮಾಧಾನ ವ್ಯಕ್ತಪಡಿಸಿ, ತೆರವು ಕಾರ್ಯಾಚರಣೆಯ ಕ್ರಮದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.
ಸಾಮಾನ್ಯವಾಗಿ ನೋಟಿಸ್ ನೀಡಿದ ನಂತರ 30 ದಿನಗಳ ಅವಧಿ ನೀಡಬೇಕು ಎನ್ನುವ ನಿಯಮವಿದ್ದರೂ, ಅದನ್ನು ಪಾಲಿಸಲಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಡೆಮಾಲಿಷನ್ ಆದೇಶವಿಲ್ಲದೇ ಕಟ್ಟಡಗಳನ್ನು ಕೆಡವಲಾಗುತ್ತಿದೆ ಎಂದು ವ್ಯಾಪಾರಿಗಳು ದೂರಿದ್ದಾರೆ. ಈ ಬೆಳವಣಿಗೆಗಳಿಂದಾಗಿ ಹಲವಾರು ವ್ಯಾಪಾರಿಗಳು ಜೀವನೋಪಾಯ ಕಳೆದುಕೊಳ್ಳುವ ಭೀತಿ ವ್ಯಕ್ತಪಡಿಸಿದ್ದು, ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ : ಕೋರ್ಟಲ್ಲಿ ಕೆಲಸ ಕೊಡಿಸೋದಾಗಿ ವಂಚನೆ ಕೇಸ್.. ಸಿಸಿಬಿ ಪೊಲೀಸರಿಂದ ದಂಪತಿಯ ಪುರಾಣ ಬಯಲು



















