ದಾವಣಗೆರೆ : ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಾದ್ಯಂತ ಕೆರೆಗಳ ಮೇಲೆ ನಡೆದಿರುವ ಒತ್ತುವರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ಇಂದು ಆರಂಭವಾಗಿದೆ. ತಾಲೂಕಿನಲ್ಲಿ ಒಟ್ಟು 14 ಕೆರೆಗಳು ಒತ್ತುವರಿಗೆ ಒಳಗಾಗಿರುವುದು ಪತ್ತೆಯಾಗಿದೆ ಎನ್ನಲಾಗಿದೆ.
ಈ ಕಾರ್ಯಾಚರಣೆಗೆ ಜಗಳೂರು ಪಟ್ಟಣದಲ್ಲಿನ ಕೆರೆಯ ಒತ್ತುವರಿ ತೆರವು ಮೂಲಕ ಚಾಲನೆ ನೀಡಲಾಗಿದೆ. ಪಟ್ಟಣದ ಬೈಪಾಸ್ ರಸ್ತೆಯ ಬಳಿ ಇರುವ ಕೆರೆಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ಅಧಿಕಾರಿಗಳು ತೆರವುಗೊಳಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಸ್ಕ್ ಫೋರ್ಸ್ ಸಮಿತಿಯ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಕಾರ್ಯಾಚರಣೆ ನಡೆಯುತ್ತಿದ್ದು, ಸರ್ವೆ ನಂಬರ್ 115 ಮತ್ತು 16ರಲ್ಲಿ ಒಟ್ಟು 507 ಎಕರೆ 20 ಗುಂಟೆ ವಿಸ್ತೀರ್ಣ ಹೊಂದಿರುವ ಕೆರೆಯಲ್ಲಿ ಸುಮಾರು 6 ಎಕರೆ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಮನೆಗಳು ಹಾಗೂ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಲಾಗಿತ್ತು.
ಇದೀಗ ಹೈಕೋರ್ಟ್ ಆದೇಶದ ಮೇರೆಗೆ ಈ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ರಥದ ಚಕ್ರ ಹರಿದು ಮಹಿಳೆಯ ಎರಡು ಕಾಲ್ ಕಟ್!



















