ಬೆಂಗಳೂರು : ರಾಜ್ಯ ಸಚಿವ ಸಂಪುಟಕ್ಕೆ ಅಂತೂ ಮುಹೂರ್ತ ಕೂಡಿಬಂದಿದೆ. ಎಲ್ಲಾ ಅಂದುಕೊಂಡಂತೆ ಆದ್ರೆ ಇಂದು (ಜು.21) ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬೀಳಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿದ್ದು, ಈಗಾಗಲೇ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ್ದಾರೆ. ಅವರೊಂದಿಗೆ ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ತೆರಳಿದ್ದಾರೆ.
ದೆಹಲಿಗೆ ತಲುಪಿದ ಬಳಿಕ ಮೊದಲಿಗೆ ಕೇಂದ್ರ ಸಚಿವರೊಂದಿಗೆ ವಿವಿಧ ವಿಷಯಗಳ ಕುರಿತು ಸಿಎಂ ಡಿಕೆಶಿ ಮಾತುಕತೆ ನಡೆಸಲಿದ್ದಾರೆ. ನಂತರ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಬೆಳವಣಿಗೆಗಳು ಹಾಗೂ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.
ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಪಸ್ಥಿತಿಯಿಂದ ಸಚಿವ ಸಂಪುಟ ವಿಸ್ತರಣೆ ಕುರಿತ ಸಭೆ ಪೂರ್ಣಗೊಳ್ಳದೆ ಮುಂದೂಡಲಾಗಿತ್ತು. ಇದೀಗ ಖರ್ಗೆ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯಲ್ಲೇ ಅಂತಿಮ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ.
ರಾಹುಲ್ ಗಾಂಧಿ ಸೂಚಿಸಿರುವ ಕೆಲವು ಹೆಸರುಗಳನ್ನು ಒಳಗೊಂಡ ಸಚಿವ ಸ್ಥಾನಗಳ ಪಟ್ಟಿಯನ್ನು ಸಿಎಂ ಡಿಕೆಶಿ ಹೈಕಮಾಂಡ್ ಮುಂದೆ ಮಂಡಿಸಲಿದ್ದಾರೆ ಎನ್ನಲಾಗಿದೆ. ಹೊಸ ಹಾಗೂ ಹಿರಿಯ ನಾಯಕರಿಗೆ ಅವಕಾಶ ಕಲ್ಪಿಸುವ ಬಗ್ಗೆ ಚರ್ಚೆಯಾಗಲಿದ್ದು, 16 ಹೊಸ ಮುಖಗಳಿಗೆ ಮತ್ತು 4 ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ.
ಒಂದು ವೇಳೆ ಹೈಕಮಾಂಡ್ ನಾಯಕರು ಈ ಪಟ್ಟಿಗೆ ಹಸಿರು ನಿಶಾನೆ ತೋರಿದರೆ, ಇದೇ ವಾರ ನೂತನ ಸಚಿವರ ಪ್ರಮಾಣವಚನ ಸಮಾರಂಭವೂ ನಡೆಯುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಸಚಿವ ಸಂಪುಟ ವಿಸ್ತರಣೆಯ ಕುರಿತು ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ.
ಇದನ್ನೂ ಓದಿ : ಹಿಂಸಾಚಾರಕ್ಕೆ ತಿರುಗಿದ ‘ಕಾಕ್ರೋಚ್’ ಪ್ರೊಟೆಸ್ಟ್ – 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ.. 70ಕ್ಕೂ ಹೆಚ್ಚು ಮಂದಿ ವಶಕ್ಕೆ!


















