ಸಿಎಂ ಸಿದ್ದರಾಮಯ್ಯ, ಈಗಾಗಲೇ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದು, ಇದೀಗ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ತವರು ಜಿಲ್ಲೆ ಮೈಸೂರಿನಲ್ಲಿ ಜು. 19ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಸಾಧನಾ ಸಮಾವೇಶ ಕಾರ್ಯಕ್ರಮ ಆಯೋಜಿಸಲಾಗಿದ್ದು, ಹೀಗಾಗಿ ಪ್ರತಿ ಕ್ಷೇತ್ರದಿಂದ 6ರಿಂದ 8 ಸಾವಿರ ಜನರನ್ನು ಕರೆತರುವಂತೆ ಶಾಸಕರಿಗೆ ಸಿದ್ದರಾಮಯ್ಯ ಟಾಸ್ಕ್ ನೀಡಿದ್ದಾರೆ ಎನ್ನಲಾಗಿದೆ.
ಮೈಸೂರಿನ ಸಾಧನಾ ಸಮಾವೇಶದಲ್ಲಿ 2,600 ಕೋಟಿ ರೂ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಸಮಾವೇಶ ಮೂಲಕ ಹಳೇ ಮೈಸೂರು ಭಾಗದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸಮಾವೇಶದ ಜವಾಬ್ದಾರಿಯನ್ನ ಸಿಎಂ ಸಿದ್ದರಾಮಯ್ಯ ಆಪ್ತರೂ ಆಗಿರುವ ಸಚಿವ ಡಾ.ಮಹದೇವಪ್ಪ ಹೆಗಲಿಗೆ ವಹಿಸಲಾಗಿದೆ.
ಈಗಾಗಲೇ ಮೈಸೂರು, ಚಾಮರಾಜನಗರ ಜಿಲ್ಲೆಯ ಶಾಸಕರ ಜೊತೆ ಒಂದು ಸುತ್ತಿನ ಸಭೆ ನಡೆಸಲಾಗಿದ್ದು, ಸಮಾವೇಶಕ್ಕೆ ಹೆಚ್ಚಿನ ಜನರನ್ನು ಕರೆತರಲು ಪ್ಲ್ಯಾನ್ ರೂಪಿಸಲಾಗಿದೆ. ಅಲ್ಲದೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.