ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಪರಿಸ್ಥಿತಿ ತೀವ್ರಗೊಂಡಿದ್ದು, ಉತ್ತರ ಒಳನಾಡಿನ ಹಲವೆಡೆ ತಾಪಮಾನ ತೀವ್ರವಾಗಿ ಕುಸಿದಿದೆ. ಇದು ಈ ಋತುವಿನ ಅತ್ಯಂತ ಶೀತದ ಸಮಯಗಳಲ್ಲಿ ಒಂದಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೊತೆಗೆ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗದಲ್ಲಿಯೂ ಶೀತಗಾಳಿ ಬೀಸುವ ಸಾಧ್ಯತೆ ಇದೆ. ಆದರೆ ಕರಾವಳಿ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಪ್ರಮುಖ ಬದಲಾವಣೆಯ ನಿರೀಕ್ಷೆಯಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಎಲ್ಲೆಲ್ಲಿ ಚಳಿ
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ವಿಶೇಷವಾಗಿ ಬೆಳಗಿನ ಜಾವದಲ್ಲಿ ದಟ್ಟವಾದ ಮಂಜು ಆವರಿಸುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಮತ್ತು 15 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ತೀವ್ರ ಶೀತ ವಾತಾವರಣವಿದ್ದು, ಕಳೆದ ಒಂದು ತಿಂಗಳಿನಿಂದ ಕನಿಷ್ಠ ತಾಪಮಾನ ಸ್ಥಿರವಾಗಿ ಕುಸಿಯುತ್ತಿದೆ ಎಂದು ಇಲಾಖೆ ತಿಳಿಸಿದೆ.
ರಾಯಚೂರು ಮತ್ತು ಧಾರವಾಡದಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಗದಗ ಮತ್ತು ಹಾವೇರಿಯಲ್ಲಿ ತಾಪಮಾನ 10 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಪೈಕಿ ಹಾಸನದಲ್ಲಿ ಕನಿಷ್ಠ ತಾಪಮಾನ 8.5 ಡಿಗ್ರಿ ಸೆಲ್ಸಿಯಸ್ ಇದ್ದರೆ, ದಾವಣಗೆರೆಯಲ್ಲಿ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರದಲ್ಲಿ ತಾಪಮಾನ ಸುಮಾರು 11 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೀದರ್ ಮತ್ತು ವಿಜಯಪುರದಲ್ಲಿ ಕನಿಷ್ಠ ತಾಪಮಾನ 7.4 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದೆ. ಸಾಧ್ಯವಾದಷ್ಟು ಬೆಚ್ಚನೆಯ ಉಡುಪುಗಳನ್ನು ಧರಿಸುವುದು, ಬೆಚ್ಚನೆಯ ಆಹಾರ ಸೇವಿಸುವುದು ಉತ್ತಮವೆಂದು ವೈದ್ಯರು ಸೂಚಿಸುತ್ತಿದ್ದಾರೆ.
ಇದನ್ನೂ ಓದಿ : ಆನೇಕಲ್ನಲ್ಲಿ ಭೀಕರ ಸರಣಿ ಅಪಘಾತ | 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಕಂಟೈನರ್ ; ಐವರ ಸ್ಥಿತಿ ಗಂಭೀರ!


















