ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ (Valmiki Case) ನಿಗಮದಲ್ಲಿನ ಕೋಟ್ಯಂತರ ರೂ. ಹಣ ಅಕ್ರಮ ವರ್ಗಾವಣೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (Nagendra) ಅವರನ್ನು ಹೆಚ್ಚಿನ ವಿಚಾರಣೆಗೆ 6 ದಿನಗಳ ಕಾಲ ಇ.ಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಶನಿವಾರ ಬೆಳಗ್ಗೆ ನಾಗೇಂದ್ರ ಅವರನ್ನು ಯಲಹಂಕದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಜು.18ರ ವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
ನೂರಾರು ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ನಂತರ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದರು. ಇ.ಡಿ ಅಧಿಕಾರಿಗಳು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರ ಮುಂದೆ ಮನವಿ ಮಾಡಿದರು. ಆದರೆ 6 ದಿನ ಕಸ್ಟಡಿಗೆ ನ್ಯಾಯಾಧೀಶರು ನೀಡಿದ್ದಾರೆ. ಜು.18 ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ.
ನ್ಯಾಯಾಧೀಶರ ಮುಂದೆ ನಾಗೇಂದ್ರ ಅವರು ಅನಾರೋಗ್ಯ ಸಮಸ್ಯೆ ಬಗ್ಗೆ ತಿಳಿಸಿದರು. ಬಿಪಿ, ಜೊತೆಗೆ ಸುಸ್ತು ಇದೆ ಎಂದರು. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಪ್ರತಿದಿನ ಮೂರು ಗಂಟೆ ವಿಚಾಣೆಗೆ ಅವಕಾಶ ನೀಡಲಾಗಿದೆ. ವಿಚಾರಣೆ ನಂತರ 30 ನಿಮಿಷಗಳ ಕಾಲ ವಿಶ್ರಾಂತ ನೀಡಬೇಕು. ಪ್ರತಿ ದಿನ ವೈದ್ಯಕೀಯ ತಪಾಸಣೆ ನಡೆಸಬೇಕು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.