ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯತ್ನಾಳ್ ಹೇಳಿಕೆ ಖಂಡಿಸಿ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ.
ಕಲ್ಯಾಣದ ಶರಣರ ಹತ್ಯೆ ನಡೆಸಿದವರು ಯಾರು? ಶರಣರು ಮರಣವೇ ಮಹಾನವಮಿ ಎಂದಿದ್ದೇಕೆ? ವಚನ ಭಂಡಾರಕ್ಕೆ ಬೆಂಕಿ ಇಟ್ಟವರು ಯಾರು? ಅನುಭವ ಮಂಟಪಕ್ಕೆ ದಾಳಿ ಮಾಡಿದವರು ಯಾರು? ಮಡಿವಾಳ ಮಾಚಿದೇವರು ಕತ್ತಿ ಹಿಡಿದಿದ್ದೇಕೆ? ಯಾರಿಂದ ರಕ್ಷಣೆ ಪಡೆಯಲು? ಬಿಜೆಪಿಯವರಿಗೆ ಈ ವಿಚಾರಗಳ ಬಗ್ಗೆ ಚರ್ಚಿಸುವ ಶಕ್ತಿ ಇದೆಯೇ? ಬಸವಣ್ಣನವರ ಅನುಭವ ಮಂಟಪದ ಪರಿಕಲ್ಪನೆಯಲ್ಲೇ ಇಂದು ನಾವು ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡಿದ್ದೇವೆ. ಅವರ ತತ್ವಗಳ ಪ್ರೇರಣೆಯಲ್ಲೇ ನಮ್ಮ ಸಂವಿಧಾನವಿದೆ. ಧಮನಿತರಿಗೆ ಆತ್ಮಶಕ್ತಿ ನೀಡಿದ, ಶೋಷಿತರಿಗೆ ಘನತೆಯ ಬದುಕು ತಂದುಕೊಟ್ಟ, ಕಲ್ಯಾಣ ಕ್ರಾಂತಿಯ ಮೂಲಕ ಮೌಢ್ಯದಲ್ಲಿ ಜಡಗಟ್ಟಿದ್ದ ಸಮಾಜಕ್ಕೆ ಹೊಸ ಮಾರ್ಗ ತೋರಿದ ಬಸವಣ್ಣನವರು ಕೇವಲ ಹೊಳೆ ಹಾರಿದವರಾಗಿ ಕಂಡಿದ್ದು ಬಿಜೆಪಿಗರ ಅಜ್ಞಾನದ ದ್ಯೋತಕವಾಗಿದೆ. ಬಸವಣ್ಣರನ್ನು ಅನುಸರಿಸುವ ಈ ನಾಡಿನ ಜನ ಬಿಜೆಪಿಗರ ಈ ನಡೆಯನ್ನು ಸಹಿಸಲು ಸಾಧ್ಯವಿಲ್ಲ. ಕೆಲ ದಿನಗಳ ಹಿಂದೆ ನಾಡಿನ ಜನ ವೇದಿಕೆಯಿಂದ ಕೆಳಗಿಳಿಸಿ ಓಡಿಸಿದ್ದರೂ ಬುದ್ದಿ ಕಲಿಯದ ಯತ್ನಾಳ್ ಅವರ ನಾಲಿಗೆಗೆ ಕಡಿವಾಣ ಹಾಕುವ ಶಕ್ತಿ ಕರ್ನಾಟಕದ ಜನರಿಗಿದೆ ಎಂದು ಪ್ರಿಯಾಂಕ್ ಖರ್ಗೆ ಎಂದು ಆರೋಪಿಸಿದ್ದಾರೆ.
ವಕ್ಫ್ ವಿರುದ್ಧದ ಪಾದಯಾತ್ರೆ ವೇಳೆ ಮಾತನಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, ವಕ್ಫ್ ವಿರುದ್ಧ ಎಲ್ಲರೂ ಹೋರಾಟ ಮಾಡಬೇಕಿದೆ. ನಾವು ಇಳಿದರೆ, ವಿಜಯೇಂದ್ರ ಬಣದವರು ಹೋರಾಟ ಮಾಡುತ್ತಾರೆ. ಬೆಂಕಿ ಹಚ್ಚುತ್ತಾರೆ. ಅವರು ನಮ್ಮ ನಡುವೆಯೇ ಜಗಳ ಹಚ್ಚುತ್ತಾರೆ. ಇದಕ್ಕೆ ನಾವು ಹೆದರಬಾರದು. ಹೆದರಿದರೆ ಬಸವಣ್ಣನವರ ಹಾಗೆ ನದಿಗೆ ಹಾರಿ ಸಾಯಬೇಕಾಗುತ್ತದೆ ಎಂದಿದ್ದರು. ಇದು ಬಸವ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.