ಮೈಸೂರು : ವರ್ಷದ ಮೊದಲ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಭಕ್ತರಿಗೆ ಅವಕಾಶವಿಲ್ಲ. ಆದರೆ, ದಕ್ಷಿಣ ಕಾಶಿ ಎಂದೇ ಹೆಸರಾದ ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಮೈಸೂರು ಜಿಲ್ಲೆಯಲ್ಲಿ ಗ್ರಹಣ ಸಂದರ್ಭದಲ್ಲಿ ಬಹುತೇಕ ದೇವಾಲಯಗಳು ಮುಚ್ಚಿರಲಿವೆ ಎಂದು ಮುಜರಾಯಿ ಇಲಾಖೆಯ ಮೂಲಗಳು ಖಚಿತಪಡಿಸಿವೆ.
ಚಾಮುಂಡಿ ಬೆಟ್ಟದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧವಿದ್ದರೂ, ವಿವಿಧ ಪೂಜಾ ವಿಧಿವಿಧಾನಗಳು ನಡೆಯಲಿವೆ. ಪ್ರತಿನಿತ್ಯ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದೇಶ-ವಿದೇಶದಿಂದಲೂ ಪ್ರವಾಸಿಗರು ಭೇಟಿ ನೀಡುತ್ತಾರೆ. ಪ್ರತಿದಿನ ಮಧ್ಯಾಹ್ನ 2 ಗಂಟೆಗೆ ದೇಗುಲ ಮುಚ್ಚಿ, ಮತ್ತೆ ಮಧ್ಯಾಹ್ನ 3.30ಕ್ಕೆ ತೆರೆಯಲಾಗುತ್ತದೆ. ಆದರೆ ಗ್ರಹಣ ಕಾರಣ ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಮುಖ್ಯದ್ವಾರವನ್ನು ಮುಚ್ಚಲಾಗುತ್ತದೆ. ಇದೇ ವೇಳೆಗೆ ದೇವಾಲಯದ ಒಳಗೆ ಪ್ರಧಾನ ಅರ್ಚಕ ಡಾ.ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 8.30ರವರೆಗೆ ದೇಗುಲದ ಶುದ್ಧೀಕರಣ ನಡೆಯಲಿದೆ. ಆ ಬಳಿಕ ದೇವಿಗೆ ವಿಶೇಷ ಅಲಂಕಾರ ಮಾಡಿ, ಭಕ್ತರು ದೇವಿ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗುತ್ತದೆ.
ನಂಜನಗೂಡು ಶ್ರೀಕಂಠೇಶ್ವರನ ದರ್ಶನಕ್ಕೆ ಅವಕಾಶ :
ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಯಾವುದೇ ಗ್ರಹಣವಾದರೂ ದೇಗುಲ ಪ್ರವೇಶಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸುವ ಪರಂಪರೆ ಇಲ್ಲ. ಗ್ರಹಣದ ವೇಳೆಯಲ್ಲಿ ಇಲ್ಲಿ ಶಿವಲಿಂಗಕ್ಕೆ ಅಭಿಷೇಕ ಸೇರಿದಂತೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.
ಮುಂಜಾನೆಯಿಂದಲೇ ದೇವರಿಗೆ ವಿಶೇಷ ಪೂಜಾ ಕೈಂಕಾರ್ಯ ನೆರವೇರಿಸಲಾಗುತ್ತಿದ್ದು, ಸಂಜೆ ಆರಕ್ಕೆ ಗ್ರಹಣ ಮೋಕ್ಷ ಮುಗಿದ ನಂತರ ದೇವರಿಗೆ ಮಹಾ ನೈವೇದ್ಯ ಸಮರ್ಪಿಸಲಾಗುತ್ತದೆ. ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಸೂರ್ಯ ಗ್ರಹಣ ಮತ್ತು ಚಂದ್ರ ಗ್ರಹಣದಂದೂ ಯಾವುದೇ ಬದಲಾವಣೆಗಳಿರುವುದಿಲ್ಲ. ಹುಣ್ಣಿಮೆ ಹಿನ್ನಲೆ ದೇವಾಲಯಕ್ಕೆ ಭಕ್ತಸಾಗರವೇ ಹರಿದು ಬರುತ್ತಿದ್ದು, ಹುಣ್ಣಿಮೆಯಂದು ಶ್ರೀಕಂಠೇಶ್ವರನ ದರ್ಶನ ಪಡೆದರೆ ಇಷ್ಟಾರ್ಥ ಸಿದ್ದಿಸುತ್ತದೆ ಎಂಬ ನಂಬಿಕೆಯಿದೆ. ಇನ್ನು ಗ್ರಹಣ ಹಿನ್ನಲೆ ಮಧ್ಯಾಹ್ನ, ರಾತ್ರಿ ಭಕ್ತರಿಗೆ ಅನ್ನ ಪ್ರಸಾದ ವಿತರಣೆ ಇರುವುದಿಲ್ಲ ಎಂದು ದೇವಾಸ್ಥಾನ ಆಡಳಿತ ಮಂಡಳಿ ತಿಳಿಸಿದೆ.
ಇದನ್ನೂ ಓದಿ : ಮರ್ಸಿಡಿಸ್-ಬೆಂಝ್ ವಿ-ಕ್ಲಾಸ್ ಭಾರತದಲ್ಲಿ ಬಿಡುಗಡೆ.. 1.4 ಕೋಟಿ ರೂ. ಬೆಲೆಯ ಈ ಐಷಾರಾಮಿ ವಾಹನವೇಕೆ ವಿಶೇಷ?



















