ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಅವರ ವಿರುದ್ಧ ಸಿ.ಟಿ.ರವಿ ಮಾತನಾಡಿರುವ ಕುರಿತು ಯಾವುದೇ ರೆಕಾರ್ಡ್ ಇಲ್ಲ. ಆದರೆ, ನಾಲ್ವರ ಸಾಕ್ಷಿ ಇದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಹೇಳಿಕೆಯ ಕುರಿತು ಆಡಿಯೋ ರೆಕಾರ್ಡ್ ಆಗಿಲ್ಲ. ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ. ಅಲ್ಲದೇ, ಈ ಕುರಿತು ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ದೂರು ನೀಡಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ನವರು ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ದ ಪ್ರತಿಭಟನೆಗೆ ಮುಂದಾದರು. ಈ ವೇಳೆ ಗಲಾಟೆ ನಡೆದಿದೆ. ಗಲಾಟೆಯ ಹಿನ್ನೆಲೆಯಲ್ಲಿ ಕಲಾಪ ಮುಂದೂಡಲಾಯಿತು. ಸಂಜೆ 6ಕ್ಕೆ ರವಿ ಬಂಧನವಾಗಿರುವ ವಿಷಯ ಗೊತ್ತಾಯಿತು ಎಂದು ಹೇಳಿದ್ದಾರೆ.
45 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಇಂತಹ ಘಟನೆ ಆಗಿರಲಿಲ್ಲ. ಒಂದೊಂದು ಸಲ ಯಾಕಾದರೂ ಅಲ್ಲಿ ಕೂತಿದ್ದೇನೆ ಅನಸುತ್ತದೆ. ನಾನು ಯಾರ ಪರವೂ ಇಲ್ಲ, ಎರಡು ಕಡೆ ಯೋಚನೆ ಮಾಡಿದ್ದೇನೆ. ಇದು ಕಡ್ಡಿ ಹೋಗಿ ಗುಡ್ಡ ಆಯ್ತು. ಬೇಲಿಯೇ ಎದ್ದು ಹೊಲ ಮೇಯ್ದರೇ ಏನಾಗತ್ತೆ ಎಂದು ಬೇಸರ ಹೊರ ಹಾಕಿದ್ದಾರೆ.
ನಾನು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ಅವರನ್ನು ಕರೆದು ಮಾತನಾಡಿದೆ. ಇಲ್ಲಿಗೆ ಮುಗಿಸೋಣ ಅಂತ ಸಲಹೆ ನೀಡಿದೆ. ನಾನು ಹತಾಶರಾಗಿದ್ದಾರೆ ಎಂದಿದ್ದೇನೆ. ಅದನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ ಅಂತ ಸಿಟಿ ರವಿ ಅವರು ಹೇಳಿದರು ಎಂದು ಸಭಾಪತಿ ಹೇಳಿದ್ದಾರೆ.
ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿಟಿ ರವಿಯವರು ತಮ್ಮ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಲಿಖಿತ ದೂರು ನೀಡಿದ್ದಾರೆ. ಸಿಟಿ ರವಿಯವರು 10 ಬಾರಿ ಅಶ್ಲೀಲ ಪದ ಬಳಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ದೂರಿಗೆ ನಾಗರಾಜ್ ಯಾದವ್, ಉಮಾಶ್ರೀ, ಡಾ.ಯತೀಂದ್ರ ಸಿದ್ದರಾಮಯ್ಯ, ಬಲ್ಕಿಸ್ ಬಾನು ಸಾಕ್ಷಿಯಾಗಿದ್ದಾರೆ.