ಹುಬ್ಬಳ್ಳಿ: ಬಿಜೆಪಿ ಶಾಸಕ ಸಿ.ಟಿ. ರವಿ ಪ್ರಕರಣವನ್ನು ಸಿಐಡಿಗೆ (CID) ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಆದರೆ, ರವಿ ನಾನು ಹೇಳಿಲ್ಲ ಅಂತಾರೆ. ಹೀಗಾಗಿ, ಸತ್ಯಾಸತ್ಯತೆ ತಿಳಿಯಲು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ. ಸಭಾಪತಿ ತಮ್ಮ ಕೆಲಸ ಮಾಡಿದ್ದಾರೆ. ನಮ್ಮ ಪೊಲೀಸರು ಅವರ ಕೆಲಸವನ್ನು ಮಾಡುತ್ತಾರೆ ಎಂದಿದ್ದಾರೆ.
ಅಸಮರ್ಥ ಗೃಹ ಸಚಿವ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ನನ್ನ ಸಾಮರ್ಥ್ಯ ಅವರಿಗೆ ಗೊತ್ತಿಲ್ಲ. ನಾನು ಜೋಶಿ ಅವರನ್ನು ಅಸಮರ್ಥ ಕೇಂದ್ರ ಸಚಿವ ಎಂದು ಹೇಳಬಹುದು. ಆದರೆ, ಅದು ಎಷ್ಟು ಸಮಂಜಸವೇ ಎಂದು ಪ್ರಶ್ನಿಸಿದ್ದಾರೆ.
ಹಳೇಹುಬ್ಬಳ್ಳಿ ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಮಹಿಳಾ ಸಿಬ್ಬಂದಿ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಬಳಿ ವರದಿಯ ನಂತರ ಈ ಕುರಿತು ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.
ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದ್ದೇವೆ. ಗಾಂಧೀಜಿ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷರಾಗಿ ನೂರು ವರ್ಷ ಕಳೆದಿದೆ. ಈ ಕಾರ್ಯಕ್ರಮದಲ್ಲಿ ಇಡೀ ಕಾಂಗ್ರೆಸ್ ಭಾಗಿಯಾಗುತ್ತದೆ. ಅದಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ ಎಂದು ಹೇಳಿದ್ದಾರೆ.