ಬೆಂಗಳೂರು: ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಇಂದು ಪರಿಶೀಲನೆ ನಡೆಸಿ, ಹೊರ ವರ್ತುಲ ರಸ್ತೆಯ ಪಿ.ಇ.ಎಸ್ ಕಾಲೇಜು ಬಳಿಯ ಹೊಸಕೆರೆಹಳ್ಳಿ ಜಂಕ್ಷನ್ ನಲ್ಲಿ ಕೈಗೆತ್ತಿಕೊಂಡಿರುವ ಮೇಲ್ಸೇತುವೆ ಕಾಮಗಾರಿಗೆ ವೇಗ ನೀಡಿ 3 ತಿಂಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ನಾಯಂಡಹಳ್ಳಿ ಜಂಕ್ಷನ್ ಬಳಿಯ ಸರ್ವೀಸ್ ರಸ್ತೆಯಲ್ಲಿ ಬರುವ ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ಅನುಪಯುಕ್ತ ವಸ್ತುಗಳಿರುವುದನ್ನು ಕಂಡು ಅದನ್ನು ಕೂಡಲೆ ತೆರವು ಮಾಡಲು ಸೂಚಿಸಿದರು. ರಾಜಕಾಲುವೆ ಹಾಗೂ ಸೈಡ್ ಡ್ರೈನ್ ಗಳಲ್ಲಿ ಹೂಳು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿದು ಹೋಗುವ ವ್ಯವಸ್ಥೆ ಮಾಡಲು ನಿರ್ದೇಶನ ನೀಡಿದರು. ನಾಯಂಡಹಳ್ಳಿ ಜಂಕ್ಷನ್ ಬಳಿ ರಾಜಕಾಲುವೆ ಪಕ್ಕದಲ್ಲಿರುವ ಖಾಲಿ ಜಾಗವು ಪಾಲಿಕೆಯದ್ದಾಗಿದ್ದರೆ ಅದನ್ನು ಸ್ವಚ್ಛಗೊಳಿಸಿ ಸುಂದರೀರಣ ಮಾಡಲು ಸೂಚಿಸಿದರು.
ಮೈಸೂರು ರಸ್ತೆ ಗೋಪಾಲನ್ ಆರ್ಚ್ ಬಳಿ ಮೇಲ್ಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಪ್ರಸ್ತುತ 33 ಆಸ್ತಿಗಳ ಭೂಸ್ವಾಧೀನ ಪ್ರಕ್ರಿಯಿಂದಾಗಿ ಕಾಮಗಾರಿ ಸ್ಥಗಿತವಾಗಿರುತ್ತದೆ. ಈ ಸಂಬಂಧ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಇತ್ಯರ್ಥ ಮಾಡಿಕೊಂಡು ಕಾಮಗಾರಿಯನ್ನು ಪುನರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು. ಮೈಸೂರು ರಸ್ತೆ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಬಳಿ ಇರುವ ಬಿ ಹೆಚ್ ಇ.ಎಲ್ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡು, ಸ್ಥಳ ಪರಿಶೀಲನೆ ನಡೆಸಿ ಶೀಘ್ರಗತಿಯಲ್ಲಿ ಬಾಕಿಯಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದರು. ಈ ಸಂದರ್ಭದಲ್ಲಿ ವಲಯ ಆಯುಕ್ತ ಸತೀಶ್, ಮುಖ್ಯ ಅಭಿಯಂತರ ಲೋಕೇಶ್, ರಾಜೇಶ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಹಲವರು ಇದ್ದರು.