ಕಾರವಾರ: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಭಟ್ಕಳದಲ್ಲಿ ಈ ಘಟನೆ ನಡೆದಿದೆ. ಮೂತ್ರ ವಿಸರ್ಜನೆಗೆ ತೆರಳಿದ್ದ ವಿದ್ಯಾರ್ಥಿ ತೆರೆದ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾನೆ. 8ನೇ ತರಗತಿ ವಿದ್ಯಾರ್ಥಿ ನಿರುಪಾದಿ ದುರ್ಗಪ್ಪ ಹರಿಜನ (14) ಸಾವನ್ನಪ್ಪಿದ್ದಾನೆ. ಈ ವಿದ್ಯಾರ್ಥಿ ಕೊಪ್ಪಳ ಜಿಲ್ಲೆಯ ಯಲಬುರ್ಗಿ ತಾಲೂಕಿನ ಗಾಣದಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಎನ್ನಲಾಗಿದೆ.
ಶಾಲೆಯ ವಿದ್ಯಾರ್ಥಿಗಳೆಲ್ಲ ಪ್ರವಾಸಕ್ಕೆಂದು ಬಂದಿದ್ದರು. ಭಟ್ಕಳದ ಹತ್ತಿರ ವಾಹನ ನಿಲ್ಲಿಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಯು ಮೂತ್ರ ವಿಸರ್ಜನೆಗೆ ತೆರಳಿದ್ದಾನೆ. ಕತ್ತಲು ಆಗಿದ್ದರಿಂದ ಬಾವಿ ಕಂಡಿಲ್ಲ. ಆ ಬಾವಿಗೆ ತಡೆಗೋಡೆ ಸಹ ಇರಲಿಲ್ಲ. ಹೀಗಾಗಿ ಏಕಾಏಕಿ ಬಾವಿಯೊಳಗೆ ಬಿದ್ದಿದ್ದಾನೆ.
ನಿರುಪಾದಿ ಬಾವಿಗೆ ಬಿದ್ದ ಕೂಡಲೇ ಜೊತೆಗಿದ್ದ ಬಾಲಕರು ಕೂಗಿಕೊಂಡಿದ್ದಾರೆ. ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿದ್ದು, ಕೂಡಲೇ ಅಗ್ನಿ ಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸಹ ಬಾವಿಯಲ್ಲಿ ಬಿದ್ದಿದ್ದ ವಿದ್ಯಾರ್ಥಿಯನ್ನು ಮೇಲಕ್ಕೆ ಎತ್ತಿದ್ದಾರೆ. ತೀವ್ರವಾಗಿ ಅಸ್ವಸ್ಥಗೊಂಡ ಬಾಲಕನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.