ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಸಚಿವ ಸಂಪುಟ ಸಭೆ(cabinet meeting) ನಡೆದಿದ್ದು, ಈ ಸಂದರ್ಭದಲ್ಲಿ ಹಲವು ನಿರ್ಣಯ ಕೈಗೊಳ್ಳಲಾಗಿದೆ.
ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ತೀರ್ಮಾನಿಸಲಾಗಿದೆ. 59 ಜನ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿ ಮುನ್ನ ಬಿಡುಗಡೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಕಾನೂನು ಸೇವಾ ತಿದ್ದುಪಡಿ ಕರಡು ನಿಯಮಗಳಿಗೆ 15 ದಿನ ಅವಕಾಶ ನೀಡುವುದು, ಆಕ್ಷೇಪಣೆ ಬರದಿದ್ದರೆ, ಕರಡು ನಿಯಮ ಮಂಡಿಸದೆ ನಿರ್ಣಯ ತೆಗೆದುಕೊಳ್ಳಲು ಅನುಮೋದನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ, ಕಿಮ್ಸ್ ಆಸ್ಪತ್ರೆಗೆ ಸಲಕರಣೆ ಖರೀದಿಗೆ 75 ಕೋಟಿ ರೂ. ಅನುದಾನ ನೀಡಲು ನಿರ್ಧರಿಸಲಾಗಿದೆ.
ಕಲಬುರಗಿಯ ಮಕ್ಕಳ ಆಸ್ಪತ್ರೆಯನ್ನು ಇಂದಿರಾಗಾಂಧಿ ಆಸ್ಪತ್ರೆ ಸಹಯೋಗದಲ್ಲಿ 150 ಹಾಸಿಗೆ ಆಸ್ಪತ್ರೆ ಸ್ಥಾಪನೆಗೆ 221 ಕೋಟಿ ರೂ.ಬಿಡುಗಡೆಗೆ ನಿರ್ಧರಿಸಲಾಗಿದೆ. ಅನ್ನ ಭಾಗ್ಯ ಯೋಜನೆ ಅಡಿ 5 ಕೆಜಿ ಅಕ್ಕಿಯ ಬದಲಾಗಿ ಹಣ ನೀಡುವ ಯೋಜನೆಯನ್ನೇ ಮುಂದುವರೆಸಲು ನಿರ್ಧರಿಸಲಾಗಿದೆ. ಅಲ್ಲದೇ, ಇನ್ನೂ ಹಲವು ವಿಷಯಗಳ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.