ನವದೆಹಲಿ : ಮಹಿಳಾ ಮೀಸಲಾತಿ ಮಸೂದೆ ಜಾರಿ ಮಾಡಲು ನಡೆಯಲಿರುವ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ತಮ್ಮ ರಾಜಕೀಯ ಪ್ರಾತಿನಿಧ್ಯಕ್ಕೆ ಕುತ್ತು ಬರಲಿದೆ ಎಂಬ ದಕ್ಷಿಣ ಭಾರತದ ರಾಜ್ಯಗಳ ಆತಂಕವನ್ನು ಕೇಂದ್ರ ಸರ್ಕಾರ ದೂರ ಮಾಡಿದೆ. ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನಗಳ ಹಂಚಿಕೆಯನ್ನು ಏಕರೂಪವಾಗಿ ಶೇ.50ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದರಿಂದ ಯಾವುದೇ ರಾಜ್ಯದ ಹಾಲಿ ಪ್ರಾತಿನಿಧ್ಯದ ಅನುಪಾತದಲ್ಲಿ ಬದಲಾವಣೆಯಾಗುವುದಿಲ್ಲ ಎಂದು ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.
ಏನಿದು ಕೇಂದ್ರದ ಹೊಸ ಸೂತ್ರ?
2029ರ ಲೋಕಸಭಾ ಚುನಾವಣೆಯ ವೇಳೆಗೆ ‘ನಾರಿ ಶಕ್ತಿ ವಂದನ್ ಅಧಿನಿಯಮ’ದ ಅಡಿ ಶೇ.33ರಷ್ಟು ಮಹಿಳಾ ಮೀಸಲಾತಿ ಜಾರಿಗೊಳಿಸುವ ಉದ್ದೇಶದಿಂದ, ಲೋಕಸಭೆಯ ಒಟ್ಟು ಸದಸ್ಯ ಬಲವನ್ನು 850ಕ್ಕೆ ಏರಿಸಲು ಸರ್ಕಾರ ಪ್ರಸ್ತಾಪಿಸಿದೆ. ಇದರಲ್ಲಿ 815 ಸ್ಥಾನಗಳನ್ನು ರಾಜ್ಯಗಳಿಗೆ ಹಾಗೂ ಉಳಿದ 35 ಸ್ಥಾನಗಳನ್ನು ಕೇಂದ್ರಾಡಳಿತ ಪ್ರದೇಶಗಳಿಗೆ ಮೀಸಲಿಡಲು ಚಿಂತನೆ ನಡೆಸಲಾಗಿದೆ.
ಪ್ರಸ್ತುತ ಲೋಕಸಭೆ 543 ಸದಸ್ಯ ಬಲವನ್ನು ಹೊಂದಿದೆ. ಏಪ್ರಿಲ್ 16 ರಿಂದ 18 ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಸಂಬಂಧ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ. ವಿಶೇಷವೆಂದರೆ, ಈ ಕ್ಷೇತ್ರ ಮರುವಿಂಗಡಣೆಗೆ 2011ರ ಜನಗಣತಿಯೇ ಅಂತಿಮ ಮಾನದಂಡವಾಗಿರುವುದಿಲ್ಲ. ಹಾಲಿ ಇರುವ ಅನುಪಾತವೇ ಮುಂದುವರಿಯಲಿದ್ದು, ಪ್ರತಿಯೊಂದು ರಾಜ್ಯದ ಲೋಕಸಭಾ ಸ್ಥಾನಗಳ ಸಂಖ್ಯೆ ಶೇ.50ರಷ್ಟು ಹೆಚ್ಚಳವಾಗಲಿದೆ. ಹೀಗಾಗಿ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯ ಕುಸಿಯುವ ಯಾವುದೇ ಸಾಧ್ಯತೆಗಳಿಲ್ಲ ಎಂದು ಮೂಲಗಳು ತಿಳಿಸಿವೆ.
ದಕ್ಷಿಣ ಭಾರತದ ಆತಂಕವೇನಿತ್ತು?
ಕೇವಲ ಜನಸಂಖ್ಯೆಯನ್ನು ಆಧರಿಸಿ ಕ್ಷೇತ್ರ ಮರುವಿಂಗಡಣೆ ಮಾಡಿದರೆ, ದಕ್ಷಿಣದ ರಾಜ್ಯಗಳಿಗೆ ಭಾರಿ ನಷ್ಟವಾಗಲಿದೆ ಎಂಬುದು ಪ್ರಮುಖ ಕಳವಳವಾಗಿತ್ತು. ಕೇರಳ, ತಮಿಳುನಾಡು, ಕರ್ನಾಟಕದಂತಹ ರಾಜ್ಯಗಳು ಕೌಟುಂಬಿಕ ಯೋಜನೆ ಮತ್ತು ಜನಸಂಖ್ಯೆ ನಿಯಂತ್ರಣವನ್ನು ಯಶಸ್ವಿಯಾಗಿ ಜಾರಿಗೊಳಿಸಿವೆ. ಆದರೆ, ಉತ್ತರ ಪ್ರದೇಶ ಮತ್ತು ಬಿಹಾರದಂತಹ ಉತ್ತರದ ರಾಜ್ಯಗಳಲ್ಲಿ ಜನಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿದೆ. ಕೇವಲ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ವಿಂಗಡಣೆಯಾದರೆ, ಉತ್ತರದ ರಾಜ್ಯಗಳು ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಪಡೆಯುತ್ತವೆ ಮತ್ತು ದಕ್ಷಿಣದ ರಾಜ್ಯಗಳ ರಾಜಕೀಯ ಧ್ವನಿ ಕ್ಷೀಣಿಸುತ್ತದೆ. ಇದು ಜನಸಂಖ್ಯೆ ನಿಯಂತ್ರಿಸಿದ ರಾಜ್ಯಗಳಿಗೆ ನೀಡುವ ‘ಶಿಕ್ಷೆ’ಯಾಗಲಿದೆ ಎಂಬುದು ದಕ್ಷಿಣದ ನಾಯಕರ ವಾದವಾಗಿತ್ತು. ಅಲ್ಲದೆ, ರಾಷ್ಟ್ರೀಯ ಜಿಡಿಪಿಗೆ ಹೆಚ್ಚಿನ ಕೊಡುಗೆ ನೀಡುತ್ತಿದ್ದರೂ, ಕೇಂದ್ರದ ಹಣಕಾಸು ಆಯೋಗದ ಅನುದಾನ ಹಂಚಿಕೆಯಲ್ಲಿ ಜನಸಂಖ್ಯೆಯ ಆಧಾರದ ಮೇಲೆ ತಾರತಮ್ಯ ಎದುರಿಸಬೇಕಾಗುತ್ತದೆ ಎಂಬ ಆತಂಕವೂ ಮನೆಮಾಡಿತ್ತು.
ನಾಯಕರ ತೀವ್ರ ವಿರೋಧ
ಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ಪ್ರಾತಿನಿಧ್ಯ ಕಡಿತಗೊಂಡರೆ ದಕ್ಷಿಣ ಭಾರತದಾದ್ಯಂತ ಜನಾಂದೋಲನ ರೂಪಿಸಬೇಕಾಗುತ್ತದೆ ಎಂದು ತೆಲಂಗಾಣದ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಕೇಂದ್ರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಡಿಎಂಕೆ ಸಂಸದರ ತುರ್ತು ಸಭೆ ಕರೆದು ಮುಂಬರುವ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಿದ್ದಾರೆ. ಅಲ್ಲದೆ ರಾಜ್ಯಕ್ಕೇನಾದರೂ ಅನ್ಯಾಯವಾದರೆ ಬೀದಿಗಿಳಿದು ಬೃಹತ್ ಹೋರಾಟ ಆರಂಭಿಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಆದಾಗ್ಯೂ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ತಮಿಳುನಾಡಿಗೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ಈಗಾಗಲೇ ಭರವಸೆ ನೀಡಿದ್ದಾರೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಹೇಳುವ ಮೂಲಕ ಸ್ಟಾಲಿನ್ ನಿಲುವನ್ನು ಟೀಕಿಸಿದ್ದಾರೆ. ಮತ್ತೊಂದೆಡೆ, ಉದ್ದೇಶಿತ ಸಾಂವಿಧಾನಿಕ ತಿದ್ದುಪಡಿಗಳು ಭಾರತದ ಒಕ್ಕೂಟ ವ್ಯವಸ್ಥೆ ಹಾಗೂ ರಾಜಕೀಯ ಸಮತೋಲನಕ್ಕೆ ಧಕ್ಕೆ ತರಲಿವೆ ಎಂದು ಎಡಪಕ್ಷಗಳ ನಾಯಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಸಿಎಸ್ಕೆಗೆ ನಾಯಕನ ಫಾರ್ಮ್ ಚಿಂತೆ – ಸತತ ಐದನೇ ಬಾರಿಗೆ ವಿಫಲರಾದ ಋತುರಾಜ್!

















