ನವದೆಹಲಿ : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಸದನದಲ್ಲಿ ನೀಡಿದ ಭಾಷಣವು ಈಗ ಭಾರೀ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ವಿದೇಶಿ ಶಕ್ತಿಗಳ ಬೆಂಬಲದೊಂದಿಗೆ ರಾಹುಲ್ ಗಾಂಧಿ ದೇಶವನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ರಾಹುಲ್ ಅವರ ಸಂಸತ್ ಸದಸ್ಯತ್ವವನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಲೋಕಸಭೆಯಲ್ಲಿ ಇಂದು ನಿರ್ಣಯ ಮಂಡಿಸಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿರುವ ನಿಶಿಕಾಂತ್ ದುಬೆ, ಜಾರ್ಜ್ ಸೊರೊಸ್ ಅವರಂತಹ ಶಕ್ತಿಗಳ ಸಹಾಯದೊಂದಿಗೆ ರಾಹುಲ್ ದೇಶಕ್ಕೆ ಹಾನಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. “ರಾಹುಲ್ ಗಾಂಧಿ ಅವರು ಸೊರೊಸ್ ಫೌಂಡೇಶನ್, ಫೋರ್ಡ್ ಫೌಂಡೇಶನ್ ಮತ್ತು USAID ನಂತಹ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರು ಥೈಲ್ಯಾಂಡ್, ಕಾಂಬೋಡಿಯಾ, ವಿಯೆಟ್ನಾಂ ಮತ್ತು ಅಮೆರಿಕದಂತಹ ದೇಶಗಳಿಗೆ ಭೇಟಿ ನೀಡುವ ಮೂಲಕ ಭಾರತ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸುತ್ತಿದ್ದಾರೆ. ಆದ್ದರಿಂದ ಅವರನ್ನು ಸಂಸತ್ ಸದಸ್ಯತ್ವದಿಂದ ವಜಾಗೊಳಿಸುವುದಲ್ಲದೆ, ಭವಿಷ್ಯದಲ್ಲಿ ಚುನಾವಣೆ ಸ್ಪರ್ಧಿಸದಂತೆ ಕಾಯಂ ಆಗಿ ನಿಷೇಧಿಸಬೇಕು,” ಎಂದು ಆಗ್ರಹಿಸಿದ್ದಾರೆ.
ರಾಹುಲ್ ಒಬ್ಬ ಅಪ್ರಬುದ್ಧ ರಾಜಕಾರಣಿ:
ಬಿಜೆಪಿಯ ಈ ನಡೆಯನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಹುಲ್ ಗಾಂಧಿ ಅವರನ್ನು “ಅಪ್ರಬುದ್ಧ ಪಾರ್ಟ್-ಟೈಮ್ ರಾಜಕಾರಣಿ” ಎಂದು ಲೇವಡಿ ಮಾಡಿದ್ದಾರೆ. “ರಾಹುಲ್ ಅವರು ಸದನದಲ್ಲಿ ಮಾಡಿದ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳನ್ನು ಒದಗಿಸಿಲ್ಲ. ಅವರ ವಿರುದ್ಧ ಹಕ್ಕುಚ್ಯುತಿ ನಿರ್ಣಯ (Privilege Motion) ಮಂಡಿಸುವ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವಾಲಯವು ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ,” ಎಂದು ಅವರು ತಿಳಿಸಿದ್ದಾರೆ. ಮತ್ತೊಂದೆಡೆ ಬಿಜೆಪಿ ಸಂಸದ ಸಂಜಯ್ ಜೈಸ್ವಾಲ್ ಅವರು, ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಅನರ್ಹರು ಎಂದು ಕಿಡಿಕಾರಿದ್ದಾರೆ.
ಸದನದಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು?
ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ನರೇಂದ್ರ ಮೋದಿ ಸರ್ಕಾರವು ಅಮೆರಿಕದ ಒತ್ತಡಕ್ಕೆ ಮಣಿದು ಭಾರತದ ಹಿತಾಸಕ್ತಿಗಳನ್ನು ಬಲಿಕೊಡುತ್ತಿದೆ ಎಂದು ದೂರಿದ್ದರು. “ಜಾಗತಿಕವಾಗಿ ಇಂಧನ ಮತ್ತು ಹಣಕಾಸು ವ್ಯವಸ್ಥೆಗಳನ್ನು ಅಸ್ತ್ರಗಳನ್ನಾಗಿ ಬಳಸಲಾಗುತ್ತಿದೆ ಎಂಬುದು ನಿಮಗೂ ತಿಳಿದಿದೆ. ಹೀಗಿದ್ದರೂ, ಅಮೆರಿಕವು ನಮ್ಮ ಇಂಧನ ಸುರಕ್ಷತೆಯನ್ನು ನಿರ್ಧರಿಸಲು ನೀವು ಅವಕಾಶ ನೀಡುತ್ತಿದ್ದೀರಿ. ನಾವು ಯಾವ ದೇಶದಿಂದ ತೈಲ ಖರೀದಿಸಬೇಕು ಎಂಬುದನ್ನು ಅಮೆರಿಕ ಹೇಳುತ್ತಿದೆ. ಇದಕ್ಕೆ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ಪ್ರಶ್ನಿಸುವ ಮೂಲಕ ಸರ್ಕಾರದ ವಿದೇಶಾಂಗ ನೀತಿಯನ್ನು ರಾಹುಲ್ ಕಟುವಾಗಿ ಟೀಕಿಸಿದ್ದರು. ರಾಹುಲ್ ಗಾಂಧಿ ಅವರ ಈ ಭಾಷಣವು ದೇಶದ ಭದ್ರತೆ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ಮೇಲೆ ಪ್ರಭಾವ ಬೀರುತ್ತದೆ ಎಂದು ಬಿಜೆಪಿ ವಾದಿಸುತ್ತಿದ್ದರೆ, ವಿರೋಧ ಪಕ್ಷಗಳು ಇದನ್ನು ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡುವ ಪ್ರಯತ್ನ ಎಂದು ಬಣ್ಣಿಸಿವೆ.
ಇದನ್ನೂ ಓದಿ : ‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!



















