ಚಂಡೀಗಢ : 2002ರಲ್ಲಿ ನಡೆದ ಪತ್ರಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಖುಲಾಸೆಗೊಳಿಸಿ ಶನಿವಾರ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಶೇಷ ಸಿಬಿಐ ನ್ಯಾಯಾಲಯವು ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿರುವ ಹೈಕೋರ್ಟ್ ಆದೇಶದಿಂದ ಡೇರಾ ಮುಖ್ಯಸ್ಥನಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಆದಾಗ್ಯೂ, ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾರಣ ಅವರ ಜೈಲುವಾಸ ಮುಂದುವರಿಯಲಿದೆ.
ಹೈಕೋರ್ಟ್ನಿಂದ ಜೀವಾವಧಿ ಶಿಕ್ಷೆ ರದ್ದು
ಸಿರ್ಸಾ ಮೂಲದ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣದಲ್ಲಿ ರಾಮ್ ರಹೀಮ್ ಹಾಗೂ ಇತರ ಮೂವರಾದ ಕುಲದೀಪ್ ಸಿಂಗ್, ನಿರ್ಮಲ್ ಸಿಂಗ್ ಮತ್ತು ಕೃಷ್ಣ ಲಾಲ್ ಅವರನ್ನು ದೋಷಿಗಳೆಂದು 2019ರಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಘೋಷಿಸಿತ್ತು. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 (ಕೊಲೆ) ಮತ್ತು 120 ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಇವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಸಿಬಿಐ ಕೋರ್ಟ್ನ ಈ ತೀರ್ಪನ್ನು ಪ್ರಶ್ನಿಸಿ ಡೇರಾ ಮುಖ್ಯಸ್ಥ ಹೈಕೋರ್ಟ್ ಮೆಟ್ಟಿಲೇರಿದ್ದರು. ಸುದೀರ್ಘ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್, ಇದೀಗ ಕೊಲೆ ಪ್ರಕರಣದಿಂದ ರಾಮ್ ರಹೀಮ್ ಅವರನ್ನು ದೋಷಮುಕ್ತಗೊಳಿಸಿದೆ ಎಂದು ಅವರ ಪರ ವಕೀಲ ಜಿತೇಂದರ್ ಖುರಾನಾ ಖಚಿತಪಡಿಸಿದ್ದಾರೆ.
ಏನಿದು ಪ್ರಕರಣ?
‘ಪೂರಾ ಸಚ್’ ಎಂಬ ಪತ್ರಿಕೆ ನಡೆಸುತ್ತಿದ್ದ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಅವರು, ಡೇರಾ ಸಚ್ಚಾ ಸೌದಾ ಪ್ರಧಾನ ಕಚೇರಿಯಲ್ಲಿ ಮಹಿಳಾ ಅನುಯಾಯಿಗಳ ಮೇಲೆ ನಡೆಯುತ್ತಿದ್ದ ಲೈಂಗಿಕ ಶೋಷಣೆಯ ಬಗ್ಗೆ ಬಂದಿದ್ದ ಅನಾಮಧೇಯ ಪತ್ರವೊಂದನ್ನು ತಮ್ಮ ಪತ್ರಿಕೆಯಲ್ಲಿ ಧೈರ್ಯವಾಗಿ ಪ್ರಕಟಿಸಿದ್ದರು. ಇದೇ ಕಾರಣಕ್ಕಾಗಿ ಅಕ್ಟೋಬರ್ 2002ರಲ್ಲಿ ಹರ್ಯಾಣದ ಸಿರ್ಸಾದಲ್ಲಿರುವ ಅವರ ಮನೆಯ ಹೊರಗೆಯೇ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.
ಸುದೀರ್ಘ ಕಾನೂನು ಹೋರಾಟ
ಪತ್ರಕರ್ತನ ಹತ್ಯೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಛತ್ರಪತಿ ಅವರ ಕುಟುಂಬ 2003ರಲ್ಲಿ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಮೆಟ್ಟಿಲೇರಿತ್ತು. ಬಳಿಕ, ಪ್ರಕರಣದ ಗಂಭೀರತೆಯನ್ನು ಅರಿತ ನ್ಯಾಯಾಲಯವು ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಸುದೀರ್ಘ ತನಿಖೆ ನಡೆಸಿದ ಸಿಬಿಐ 2007ರ ಜುಲೈ ತಿಂಗಳಿನಲ್ಲಿ ಆರೋಪಪಟ್ಟಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿ ಸಿಬಿಐ ಕೋರ್ಟ್ ಶಿಕ್ಷೆ ಪ್ರಕಟಿಸಲು ಬರೋಬ್ಬರಿ 17 ವರ್ಷಗಳೇ ಬೇಕಾಗಿತ್ತು.
ಜೈಲುವಾಸವೇಕೆ ಮುಂದುವರಿಕೆ?
ಪತ್ರಕರ್ತನ ಕೊಲೆ ಪ್ರಕರಣದಲ್ಲಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ಖುಲಾಸೆಗೊಂಡಿದ್ದರೂ, ಅವರು ಜೈಲಿನಿಂದ ಹೊರಬರಲು ಆಗುವುದಿಲ್ಲ. ತಮ್ಮ ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ 2017ರಲ್ಲಿ ದೋಷಿ ಎಂದು ಘೋಷಿಸಲ್ಪಟ್ಟಿರುವ ಕಾರಣ ಅವರು ಪ್ರಸ್ತುತ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹರ್ಯಾಣದ ರೋಹ್ಟಕ್ನಲ್ಲಿರುವ ಸುನಾರಿಯಾ ಜೈಲಿನಲ್ಲಿ ಅವರ ಶಿಕ್ಷೆಯ ಅವಧಿ ಎಂದಿನಂತೆ ಮುಂದುವರಿಯಲಿದೆ.
ಇದನ್ನೂ ಓದಿ : ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?



















