ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇನ್ನು ಮೂರ್ನಾಲ್ಕು ದಿನದಲ್ಲಿ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರ ಪುತ್ರ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ದೇವೇಗೌಡರ ಆರೋಗ್ಯ ವಿಚಾರಿಸಲು ಇಂದು ದೆಹಲಿಯಿಂದ ಬೆಂಗಳೂರಿಗೆ ಬಂದ ಕುಮಾರಸ್ವಾಮಿ ಅವರು ತಂದೆ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
‘ದೇವರ ಆಶೀರ್ವಾದದಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ವೈದ್ಯರ ಚಿಕಿತ್ಸೆಯಿಂದ ಗೌಡರ ಆರೋಗ್ಯ ಸಮಸ್ಯೆಗಳು ಪರಿಹಾರವಾಗಿದೆ. ಅಭಿಮಾನಿಗಳು ಕಾರ್ಯಕರ್ತರು ಆತಂಕಪಡುವ ಅವಶ್ಯಕತೆ ಇಲ್ಲ. ಇನ್ನೊಂದು ಮೂರ್ನಾಲ್ಕು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು 3 ದಿನದ ಹಿಂದೆ ಅನಾರೋಗ್ಯಕ್ಕೀಡಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ನಿಂದ ಬಳಲುತ್ತಿದ್ದ ದೇವೇಗೌಡರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ದೇವೇಗೌಡರು ಚೇತರಿಸಿಕೊಂಡಿದ್ದಾರೆ. ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.