ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಬೆಳ್ತಂಗಡಿ ಕಚೇರಿಗೆ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಧರ್ಮಸ್ಥಳದ ಉದಯ್ ಜೈನ್ ಇಂದು (ಬುಧವಾರ) ಹಾಜರಾಗಿದ್ದಾರೆ.
ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಉದಯ್ ಜೈನ್, ಮಲ್ಲಿಕ್ ಜೈನ್ ಹಾಗೂ ಧೀರಜ್ ಕೆಲ್ಲ ಅವರ ಹೆಸರು ಕೂಡ ತಳಕು ಹಾಕಿಕೊಂಡಿತ್ತು.
‘ಸೌಜನ್ಯ ಕೊಲೆ ಪ್ರಕರಣದ ಎಫ್ಐಆರ್ ನಲ್ಲಿ ನಮ್ಮ ಹೆಸರು ಇರಲಿಲ್ಲ. ಆದಾಗ್ಯೂ ನಮ್ಮನ್ನು ಆರೋಪಿಗಳನ್ನಾಗಿಸುವ ಷಡ್ಯಂತ್ರ ನಡೆದಿತ್ತು. ಸಿಬಿಐ ಹಾಗೂ ಸಿಐಡಿ ಅಧಿಕಾರಿಗಳು ನಮ್ಮನ್ನು ವಿಚಾರಣೆಗೆ ಒಳಪಡಿಸಿದ್ದರು. ನಮ್ಮ ಮಂಪರು ಪರೀಕ್ಷೆಯನ್ನೂ ನಡೆಸಲಾಗಿತ್ತು. ಆ ಪ್ರಕರಣದಲ್ಲಿ ನಮ್ಮ ಪಾತ್ರ ಇಲ್ಲ ಎಂದು ಸಾಬೀತಾಗಿತ್ತು. ಈಗ ಎಸ್ಐಟಿಯವರು ಯಾವ ಪ್ರಕರಣ ಸಂಬಂಧ ವಿಚಾರಣೆಗೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ನನ್ನಂತೆಯೇ, ಇನ್ನಿಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿಯವರು ಕರೆ ಮಾಡಿದ್ದಾರೆ. ನಾನು ಧೀರಜ್ ಕೆಲ್ಲ ಅವರಿಗೆ ಕರೆ ಮಾಡಿದ್ದೆ. ಆಗ ಅವರು ಈ ವಿಚಾರ ತಿಳಿಸಿದ್ದಾರೆ. ಎಸ್ಐಟಿಯವರು ಕರೆದಿದ್ದಾರೆ ಎಂದ ಮೇಲೆ ಅವರು ಕೂಡ ಬರಲೇ ಬೇಕಾಗುತ್ತದೆ ಅಲ್ಲವೇ’ ಎಂದು ಹೇಳಿದ್ದಾರೆ.