ಬೆಂಗಳೂರು : ರಾಜಧಾನಿಯಲ್ಲಿ ಮತ್ತೊಂದು ಹೃದಯವಿದ್ರಾವಕ ಪ್ರೇಮ ದುರಂತ ನಡೆದಿದ್ದು, ಪ್ರಿಯಕರನೇ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
ಕೊಲೆಯಾದ ಯುವತಿಯನ್ನು ಅಂಜಲಿ (23) ಎಂದು ಗುರುತಿಸಲಾಗಿದ್ದು, ಆರೋಪಿ ಪ್ರಿಯಕರ ರಾಜೀವ್ ಎಂದು ತಿಳಿದುಬಂದಿದೆ. ರಾತ್ರಿ ಸುಮಾರು 9.30ರ ವೇಳೆಗೆ ಈ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಅಂಜಲಿ ಮತ್ತು ರಾಜೀವ್ ಕಳೆದ ಮೂರು–ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರ ಕುಟುಂಬಗಳಿಗೂ ಅವರ ಪ್ರೀತಿಯ ವಿಚಾರ ತಿಳಿದಿತ್ತು. ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ನೀಡಿರಲಿಲ್ಲ.
ಇಬ್ಬರೂ ಈ ಹಿಂದೆ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪರಿಚಯವಾಗಿದ್ದು, ಬಳಿಕ ಅವರ ಸ್ನೇಹ ಪ್ರೀತಿಗೆ ತಿರುಗಿತ್ತು. ಹಲವು ಬಾರಿ ಮದುವೆಗೆ ಕುಟುಂಬವನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ, ರಾಜೀವ್ನಿಂದ ದೂರ ಉಳಿಯಲು ಆರಂಭಿಸಿದ್ದಳು ಎನ್ನಲಾಗಿದೆ.
ಘಟನೆ ನಡೆದ ದಿನ ಸಂಜೆ ರಾಜೀವ್, ಅಂಜಲಿಯನ್ನು ಊಟಕ್ಕೆ ಕರೆಸಿಕೊಂಡಿದ್ದನು. ಈ ವೇಳೆ ಮತ್ತೆ ಮದುವೆಯ ವಿಚಾರ ಪ್ರಸ್ತಾಪವಾಗಿದ್ದು, ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ವಾಗ್ವಾದದ ನಡುವೆ ಕೋಪಗೊಂಡ ರಾಜೀವ್, ಅಂಜಲಿಯನ್ನು ಪೈಪ್ಲೈನ್ ರಸ್ತೆಗೆ ಕರೆದುಕೊಂಡು ಹೋಗಿ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಗಾಯಗೊಂಡ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೃತ ಅಂಜಲಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಬೆಂಗಳೂರಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ!


















