ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐಆರ್ ರದ್ದು ಕೋರಿ ಡಿಎನ್ಎ ಎಂಟರ್ಟೈನ್ಮೆಂಟ್ ನಿಂದ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ.
ಅರ್ಜಿಯಲ್ಲಿ ಡಿಎನ್ ಎ ಸರ್ಕಾರದ ವಿರುದ್ಧವೇ ಹಲವು ಆರೋಪಗಳನ್ನು ಮಾಡಲಾಗಿದೆ. ಭಾರತ ಟಿ20 ವಿಶ್ವಕಪ್ ಗೆದ್ದಾಗ ವಿಕ್ಟರಿ ಪೆರೇಡ್ ನಡೆಸಲಾಗಿತ್ತು. ಡಿಎನ್ಎ ಆಯೋಜಿಸಿದ್ದ ಪೆರೇಡ್ ನಲ್ಲಿ 3 ಲಕ್ಷ ಜನರಿದ್ದರೂ ಅವಘಡಗಳಾಗಿರಲಿಲ್ಲ. ವಾಂಖೇಡೆ ಸ್ಟೇಡಿಯಂನ ಪ್ರೇಕ್ಷಕರ ಸಾಮರ್ಥ್ಯ 32 ಸಾವಿರವಿದ್ದರೂ ಸಮಸ್ಯೆ ಆಗಿರಲಿಲ್ಲ. ಆರ್ಸಿಬಿ ವಿಕ್ಟರಿ ಪೆರೇಡ್ ನಡೆಸಲು ಅನುಮತಿಗಾಗಿ ಜೂ. 3ರಂದು ಪತ್ರ ಬರೆದಿದ್ದೇವು. ತೆರೆದ ಬಸ್ ಪೆರೇಡ್ ಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ರಾಜ್ಯ ಸರ್ಕಾರ ವಿಧಾನಸೌಧದ ಮುಂದೆ ಕಾರ್ಯಕ್ರಮಕ್ಕೆ ನಿರ್ಧರಿಸಿತ್ತು. ಪೊಲೀಸರು ವಿಧಾನಸೌಧದ ಕಾರ್ಯಕ್ರಮಕ್ಕೆ ಹೆಚ್ಚಿನ ಭದ್ರತೆ ನೀಡಿದರು. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಗತ್ಯವಿದ್ದಷ್ಟು ಪೊಲೀಸರು ಇರಲಿಲ್ಲ. ಡಿಎನ್ಎ ನಿಂದಲೇ 584 ಖಾಸಗಿ ಸಿಬ್ಬಂದಿಯನ್ನು ನೇಮಿಸಲಾಗಿತ್ತು. ಸರ್ಕಾರ ತನ್ನ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಬಂಧನಕ್ಕೆ ಆದೇಶಿಸಿದೆ ಎಂದಿದ್ದಾರೆ.
ಸಿಎಂ ಸೂಚನೆ ಮೇರೆಗೆ ಡಿಎನ್ಎ ನ ಇಬ್ಬರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಘಟನೆ ದಿನ ಪೊಲೀಸರಿಗೆ 2450 ಆಹಾರ ಪೊಟ್ಟಣ ಸಿದ್ದಪಡಿಸಲಾಗಿತ್ತು. ಆದರೆ ಪೊಲೀಸರು ಕಡಿಮೆ ಸಂಖ್ಯೆಯಲ್ಲಿದ್ದಿದ್ದರಿಂದ ಮಧ್ಯಾಹ್ನ 600 ಊಟದ ಬಾಕ್ಸ್ ಸ್ವೀಕರಿಸಿದರು. ರಾತ್ರಿ ಭೋಜನಕ್ಕೆ ಮಾತ್ರ 2,450 ಆಹಾರ ಬಾಕ್ಸ್ ಸ್ವೀಕರಿಸಿದರು. 3.30ಕ್ಕೆ ಗೇಟ್ ತೆರೆದ ಬಳಿಕವೂ ಅಭಿಮಾನಿಗಳ ದಟ್ಟಣೆ ಇತ್ತು. ಬಳಿಕ ಬಂದ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ. ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂನ ಕಾರ್ಯಕ್ರಮದ ಪ್ಲಾನ್ ಸರ್ಕಾರ ಹಾಗೂ ಕೆಎಸ್ಸಿಎ ನದ್ದು. ಆರ್ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಲು ಸರ್ಕಾರವೇ ಕರೆ ಕೊಟ್ಟಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿ ಚರ್ಚಿಸಿ ಕ್ಷಣಕ್ಷಣದ ಪ್ಲಾನ್ ರೂಪಿಸಿದ್ದರು. ಸರ್ಕಾರ ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಿದ್ದರಿಂದಲೇ ಕಾಲ್ತುಳಿತ ಅಗಿದೆ. ಲಕ್ಷಾಂತರ ಜನ ವಿಧಾನಸೌಧಕ್ಕೆ ಬಂದು, ಸ್ಟೇಡಿಯಂಗೂ ಬಂದಿದ್ದೇ ಕಾರಣ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.