ಉಡುಪಿ : ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ಸುದ್ದಿ ಪ್ರಕಟಿಸಿದ್ದ ಖಾಸಗಿ ಪತ್ರಿಕೆಯ ಕುಂದಾಪುರ ವರದಿಗಾರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಸರ್ಕಾರಿ ಆಸ್ಪತ್ರೆಯ ಸರ್ಜನ್ ಡಾ. ಮಹೇಂದ್ರ ಶೆಟ್ಟಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕುಂದಾಪುರದ ಖಾಸಗಿ ಹೋಟೆಲ್ನಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಹಲ್ಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಪತ್ರಕರ್ತನ ಕರ್ತವ್ಯ ನಿರ್ವಹಣೆಗೆ ಪ್ರತಿಯಾಗಿ ಹಲ್ಲೆ ನಡೆಸಿರುವ ಘಟನೆಗೆ ಪತ್ರಕರ್ತರ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕೆಲ ದಿನಗಳ ಹಿಂದೆ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ರೋಗಿಗಳಿಂದ ಹಣ ಪಡೆಯಲಾಗುತ್ತಿದೆ ಎಂಬ ಆರೋಪದ ಕುರಿತು ಶ್ರೀಕಾಂತ್ ಹೆಮ್ಮಾಡಿ ವರದಿ ಪ್ರಕಟಿಸಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಉಚಿತ ಹಾಗೂ ಸೂಕ್ತ ಚಿಕಿತ್ಸೆ ದೊರೆಯಬೇಕಾದ ಸಂದರ್ಭದಲ್ಲಿ ಹಣ ಪಡೆಯಲಾಗುತ್ತಿದೆ ಎಂಬ ಆರೋಪದ ಬಗ್ಗೆ ವರದಿ ಮಾಡಲಾಗಿತ್ತು. ವರದಿಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕೂಡ ಪ್ರತಿಕ್ರಿಯಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ವರದಿ ಪ್ರಕಟವಾದ ಬಳಿಕ ಆರೋಗ್ಯ ಇಲಾಖೆ ಡಾ. ಮಹೇಂದ್ರ ಶೆಟ್ಟಿ ಅವರನ್ನು ಕಾರ್ಕಳ ತಾಲೂಕಿಗೆ ತಾತ್ಕಾಲಿಕವಾಗಿ ವರ್ಗಾವಣೆ ಮಾಡಿತ್ತು. ಈ ಕ್ರಮವನ್ನು ವೈದ್ಯರ ವಿರುದ್ಧ ಪತ್ರಕರ್ತರು ನಡೆಸುತ್ತಿರುವ ಶೋಷಣೆ ಎಂಬ ರೀತಿಯಲ್ಲಿ ಡಾ. ಮಹೇಂದ್ರ ಶೆಟ್ಟಿ ಸಾಮಾಜಿಕ ಜಾಲತಾಣದ ಸ್ಟೇಟಸ್ಗಳಲ್ಲಿ ಹಾಕಿಕೊಂಡಿದ್ದರು. ಅಲ್ಲದೆ, ಶ್ರೀಕಾಂತ್ ಹೆಮ್ಮಾಡಿ ಅವರಿಗೆ ವಾಟ್ಸಪ್ ಸ್ಟೇಟಸ್ ಮೂಲಕ ಬೆದರಿಕೆ ಹಾಕಿದ್ದ ಆರೋಪವೂ ಇದೆ.
ಇಂದು ಬೆಳಗ್ಗೆ ಶ್ರೀಕಾಂತ್ ಹೆಮ್ಮಾಡಿ ಅವರು ತಮ್ಮ ಪತ್ನಿ ಹಾಗೂ ಪತ್ರಕರ್ತ ಸ್ನೇಹಿತರೊಂದಿಗೆ ಕುಂದಾಪುರದ ಖಾಸಗಿ ಹೋಟೆಲ್ನಲ್ಲಿ ಉಪಹಾರ ಸೇವಿಸುತ್ತಿದ್ದಾಗ ಡಾ. ಮಹೇಂದ್ರ ಶೆಟ್ಟಿ ಅಲ್ಲಿಗೆ ಬಂದಿದ್ದಾರೆ. ಮಾತನಾಡುವುದಿದೆ ಎಂದು ಶ್ರೀಕಾಂತ್ ಅವರನ್ನು ಬದಿಗೆ ಕರೆದುಕೊಂಡು ಹೋದ ವೈದ್ಯರು, ಬಳಿಕ ಏಕಾಏಕಿ ಅವರ ಕೆನ್ನೆಗೆ ಹೊಡೆದು ಹಲ್ಲೆ ನಡೆಸಿದ್ದಾರೆ. ಈ ವೇಳೆ ಶ್ರೀಕಾಂತ್ ಅವರ ಪತ್ನಿ ತಕ್ಷಣ ಮಧ್ಯಪ್ರವೇಶಿಸಿ ವೈದ್ಯರನ್ನು ತಡೆದಿದ್ದಾರೆ. ಸ್ಥಳದಲ್ಲಿದ್ದ ಮತ್ತೊಬ್ಬ ಮಹಿಳಾ ವೈದ್ಯೆಯೂ ಗಲಾಟೆ ತಪ್ಪಿಸಲು ಮಧ್ಯಪ್ರವೇಶಿಸಿದ್ದಾರೆ. ಘಟನೆಯ ಸಂದರ್ಭದಲ್ಲಿ ಶ್ರೀಕಾಂತ್ ಹೆಮ್ಮಾಡಿ ತಾಳ್ಮೆಯಿಂದ ವರ್ತಿಸಿದ್ದು, ಪತ್ರಕರ್ತನ ಸಂಯಮಕ್ಕೆ ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.
ಘಟನೆಯನ್ನು ಖಂಡಿಸಿದ ಉಡುಪಿ ಜಿಲ್ಲಾ ಪತ್ರಕರ್ತರ ಸಂಘ
ಘಟನೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ. ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರು ಪ್ರಕಟಣೆಯಲ್ಲಿ, ಶ್ರೀಕಾಂತ್ ಹೆಮ್ಮಾಡಿ ಅವರ ಮೇಲಿನ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯಾಗಿರುವ ವೈದ್ಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಪತ್ರಕರ್ತರು ಸಾರ್ವಜನಿಕ ಸಮಸ್ಯೆ, ಭ್ರಷ್ಟಾಚಾರ ಹಾಗೂ ಸರ್ಕಾರಿ ವ್ಯವಸ್ಥೆಯ ಲೋಪಗಳ ಬಗ್ಗೆ ವರದಿ ಮಾಡುವುದು ಅವರ ಕರ್ತವ್ಯ. ವರದಿಯಲ್ಲಿ ತಪ್ಪಿದ್ದರೆ ದಾಖಲೆಗಳ ಮೂಲಕ ಸ್ಪಷ್ಟನೆ ನೀಡಬಹುದು ಅಥವಾ ಕಾನೂನುಬದ್ಧವಾಗಿ ಪ್ರಶ್ನಿಸಬಹುದು. ಪತ್ರಕರ್ತನ ಮೇಲೆ ಹಲ್ಲೆ ನಡೆಸುವುದು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಸಂಘ ಆಕ್ರೋಶ ವ್ಯಕ್ತಪಡಿಸಿದೆ.
ಸದ್ಯ ಕುಂದಾಪುರ ಪೊಲೀಸರು ಆಸ್ಪತ್ರೆಗೆ ತೆರಳಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮಾಹಿತಿ ಹಾಗೂ ಹೇಳಿಕೆಗಳನ್ನು ಪಡೆದುಕೊಂಡು ಡಾ. ಮಹೇಂದ್ರ ಶೆಟ್ಟಿ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಲ್ಲೆಗೆ ಕಾರಣ, ಹಿಂದಿನ ವರದಿಯೊಂದಿಗೆ ಘಟನೆಗಿರುವ ಸಂಬಂಧ, ಪತ್ರಕರ್ತನಿಗೆ ನೀಡಲಾಗಿದ್ದ ಬೆದರಿಕೆ ಹಾಗೂ ಸಿಸಿಟಿವಿ ದೃಶ್ಯಗಳನ್ನೂ ಪೊಲೀಸರು ಪರಿಶೀಲಿಸಬೇಕಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ ಪತ್ರಕರ್ತನ ಮೇಲೆ ಹಲ್ಲೆ ನಡೆದಿರುವುದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಸರ್ಕಾರಿ ಆಸ್ಪತ್ರೆಯಲ್ಲಿನ ಅಕ್ರಮದ ಬಗ್ಗೆ ಪ್ರಶ್ನಿಸಿ ವರದಿ ಮಾಡುವುದು ಪತ್ರಕರ್ತನ ಕರ್ತವ್ಯ. ವರದಿ ತಪ್ಪಿದ್ದರೆ ಅದಕ್ಕೆ ಉತ್ತರ ನೀಡುವ ಹಲವು ಕಾನೂನುಬದ್ಧ ಮಾರ್ಗಗಳಿವೆ. ಆದರೆ ಹಲ್ಲೆ ನಡೆಸುವುದು ಉತ್ತರವಾಗಲು ಸಾಧ್ಯವಿಲ್ಲ. ಶ್ರೀಕಾಂತ್ ಹೆಮ್ಮಾಡಿ ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿ ಸತ್ಯವನ್ನು ಹೊರತಂದು, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು. ಪತ್ರಕರ್ತರ ಸುರಕ್ಷತೆ ಹಾಗೂ ಪತ್ರಿಕಾ ಸ್ವಾತಂತ್ರ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಪೊಲೀಸರು ಮತ್ತು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಇದೀಗ ಬಲವಾಗಿದೆ.
ಇದನ್ನೂ ಓದಿ : 2027ರ ಏಕದಿನ ವಿಶ್ವಕಪ್ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್ಗೆ ಸ್ಥಾನ


















