ಬೆಂಗಳೂರು : ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು (NSQF) ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೃತ್ತಿಪರ ತರಬೇತುದಾರರು ಜೂ.10ರಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರನ್ನು ಭೇಟಿ ಮಾಡಿ ಮಹತ್ವದ ಮನವಿ ಸಲ್ಲಿಸಿದ್ದು, ಶಾಲಾ-ಕಾಲೇಜುಗಳಲ್ಲಿ ಬೋಧನೆಯಾಗುತ್ತಿರುವ Apparels & Home Furnishing, Beauty & Wellness ಹಾಗೂ Retail ವಿಷಯಗಳ ಪ್ರವೇಶಾತಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ 9ನೇ ತರಗತಿಯಿಂದ ಸ್ಥಗಿತಗೊಳಿಸುವ ಬಗ್ಗೆ ಇಲಾಖೆಯ ಅಧಿಕಾರಿಗಳು ಮೌಖಿಕ ಸೂಚನೆ ನೀಡಿರುವುದಾಗಿ ನಾಗಲಕ್ಷ್ಮೀ ಚೌಧರಿ ಅವರ ಗಮನಕ್ಕೆ ತಂದಿದ್ದರು.

ಹಿಂದುಳಿದ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿರುವ NSQF ಯೋಜನೆ ಸ್ಥಗಿತಗೊಂಡರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಲಿದೆ ಎಂದು ತರಬೇತುದಾರರು ಆತಂಕ ವ್ಯಕ್ತಪಡಿಸಿದ್ದು, ಈ ಯೋಜನೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳು ಉದ್ಯೋಗ ಕೌಶಲ್ಯಗಳನ್ನು ಕಲಿಯುತ್ತಿದ್ದು, ಸ್ವಯಂ ಉದ್ಯೋಗದ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ನಾಗಲಕ್ಷ್ಮೀ ಚೌಧರಿ ಅವರಿಗೆ ವಿವರಿಸಿದ್ದರು.

ಇನ್ನು, ಈ ಯೋಜನೆಯಡಿ ಕೆಲಸ ಮಾಡುತ್ತಿರುವ ವೃತ್ತಿಪರ ತರಬೇತುದಾರರಲ್ಲೂ ಸಾಕಷ್ಟು ಮಹಿಳೆಯರು, ಏಕಪೋಷಕ ತಾಯಂದಿರು ಹಾಗೂ ವಿಧವೆಯರು ಇದ್ದಾರೆ. ಯೋಜನೆ ಸ್ಥಗಿತಗೊಂಡರೆ ಅವರು ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಲಿದ್ದು, ಮಹಿಳಾ ತರಬೇತುದಾರರು ಮತ್ತು ವಿದ್ಯಾರ್ಥಿನಿಯರಿಗೆ ಅನ್ಯಾಯವಾಗಲಿದೆ ಎಂದು ತಮ್ಮ ನೋವನ್ನು ಹೇಳಿಕೊಂಡಿದ್ದರು.

ಈ ಮನವಿಗೆ ತಕ್ಷಣ ಸ್ಪಂದಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು, ಉಡುಪಿ ಜಿಲ್ಲಾ ಪ್ರವಾಸದ ವೇಳೆ ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ವಸತಿ ನಿಲಯದಲ್ಲಿ NSQF ಯೋಜನೆಯಡಿ ತರಬೇತಿ ಪಡೆದ ವಿದ್ಯಾರ್ಥಿನಿಯರ ಕೌಶಲ್ಯ ಪ್ರದರ್ಶನವನ್ನು ವೀಕ್ಷಿಸಿದ್ದನ್ನು ಸ್ಮರಿಸಿ ವಿದ್ಯಾರ್ಥಿನಿಯರಲ್ಲಿದ್ದ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಸ್ವಾವಲಂಬಿ ಬದುಕಿನತ್ತ ಅವರ ಸಿದ್ಧತೆಯನ್ನು ಕಂಡು ಸಂತೋಷ ವ್ಯಕ್ತಪಡಿಸುತ್ತಾ ಈ ವಿಷಯವನ್ನು ತರಬೇತುದಾರೊಂದಿಗೆ ಹಂಚಿಕೊಂಡಿದ್ದಾರೆ.

ಹಾಗೆಯೇ ಮಹಿಳಾ ಸಬಲೀಕರಣ ಹಾಗೂ ಆರ್ಥಿಕ ಸ್ವಾವಲಂಬನೆಗೆ NSQF ಯೋಜನೆ ಪರಿಣಾಮಕಾರಿಯಾಗಿ ನೆರವಾಗುತ್ತಿದ್ದು, ಇತರ ರಾಜ್ಯಗಳಲ್ಲಿ ಯಶಸ್ವಿಯಾಗಿ ಮುಂದುವರಿಯುತ್ತಿರುವ ಈ ಯೋಜನೆಯನ್ನು ಕರ್ನಾಟಕದಲ್ಲಿಯೂ ಮುಂದುವರಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು, ಮಹಿಳಾ ತರಬೇತುದಾರರ ಉದ್ಯೋಗ ಭದ್ರತೆಯನ್ನು ಕಾಪಾಡುವಂತೆ ಒತ್ತಾಯಿಸಿದ್ದಾರೆ.
ಈ ಸಂಬಂಧ NSQF ಯೋಜನೆಯನ್ನು ಮುಂದುವರಿಸುವುದು, ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ತರಬೇತುದಾರರಿಗೆ ಉದ್ಯೋಗ ಭದ್ರತೆ ಒದಗಿಸುವುದು ಹಾಗೂ ಈ ಸಂಬಂಧ ಕೈಗೊಂಡ ಕ್ರಮಗಳ ವರದಿಯನ್ನು 30 ದಿನಗಳೊಳಗೆ ಮಹಿಳಾ ಆಯೋಗಕ್ಕೆ ಸಲ್ಲಿಸುವಂತೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ : ‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!



















