ರಾಮನಗರ: ವರದಕ್ಷಿಣೆ ಕಿರುಕುಳಕ್ಕೆ ಪತ್ನಿ ಬಲಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಕನಕಪುರದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ. ಕಳೆದ 2020ರಲ್ಲಿ ಈ ಘಟನೆ ನಡೆದಿತ್ತು. ಹಾರೋಹಳ್ಳಿ (Harohalli) ತಾಲೂಕಿನ ಮರಳವಾಡಿ ಗ್ರಾಮದ ಅನಿಲ್ ಎಂಬಾತನ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರು. ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಅಶ್ವಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿತ್ತು.
ಈ ಕುರಿತು ಅಶ್ವಿನಿ ಕುಟುಂಬಸ್ಥರು ಅನಿಲ್ ವಿರುದ್ಧ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆಗ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದರು. ನಂತರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ತನಿಖೆ ಕೈಗೊಂಡ ಕೋರ್ಟ್, ಗುರುವಾರ ತೀರ್ಪು ಪ್ರಕಟಿಸಿದೆ. ಸಾಕ್ಷ್ಯಾಧಾರಗಳ ಮೂಲಕ ವರದಕ್ಷಿಣೆ ಕಿರುಕುಳ ಆರೋಪ ಸಾಬೀತಾಗಿದ್ದು, ಜೀವಾವಧಿ ಶಿಕ್ಷೆ ಹಾಗೂ 35 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.