ಬೆಂಗಳೂರು: ದೇಶದ ಬಾಹ್ಯಾಕಾಶ ವಿಜ್ಞಾನಿಗಳಲ್ಲಿ ಅಗ್ರ ಸ್ಥಾನವನ್ನು ಪಡೆದಿದ್ದ ಡಾ.ಕೆ. ಕಸ್ತೂರಿರಂಗನ್ ಅವರು ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡ ಒಬ್ಬ ಹಿರಿಯ ಚೇತನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು.
ಬಿ.ಎಸ್. ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಗಳಿದ್ದಾಗ ಜ್ಞಾನ ಆಯೋಗದ ಮೂಲಕ ಹಾಗೂ ಬೇರೆ ಬೇರೆ ಸಂದರ್ಭಗಳಲ್ಲಿ ಅಂದಿನ ಸರ್ಕಾರಕ್ಕೆ ಸಲಹೆಗಳನ್ನು ನೀಡಿದ್ದರು ಎಂದು ನೆನಪಿಸಿದರು.
ರಾಜ್ಯಸಭಾ ಸದಸ್ಯರಾಗಿಯೂ ತಮ್ಮ ಸೇವೆಯನ್ನು ಸಲ್ಲಿಸಿದ್ದರು. ಅಂತಹ ಹಿರಿಯ ಚೇತನ ಇವತ್ತು ನಮ್ಮೊಂದಿಗೆ ಇಲ್ಲ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಅಗಲಿಕೆಯನ್ನು ತಡೆಯುವಂತಹ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಮತ್ತು ವಿಜ್ಞಾನಿಗಳಿಗೆ ಹಾಗೂ ಲಕ್ಷಲಕ್ಷ ಸಂಖ್ಯೆಯಲ್ಲಿರುವ ವಿದ್ಯಾರ್ಥಿಗಳಿಗೆ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.