ಅಮರಾವತಿ: ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟವು(Explosion in Firecracker Factory) 8 ಮಂದಿ ಕಾರ್ಮಿಕರನ್ನು ಬಲಿಪಡೆದುಕೊಂಡ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಕೈಲಾಸಪಟ್ಟಣಂ ಗ್ರಾಮದಲ್ಲಿ ಭಾನುವಾರ (ಏಪ್ರಿಲ್ 13, 2025) ಮಧ್ಯಾಹ್ನ ಸಂಭವಿಸಿದೆ. ದುರಂತದಲ್ಲಿ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಕಾರ್ಮಿಕರ ಪೈಕಿ ಇಬ್ಬರು ಮಹಿಳೆಯರೂ ಸೇರಿದ್ದಾರೆ.
ಭಾನುವಾರ ಮಧ್ಯಾಹ್ನ 12:45ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಏಕಾಏಕಿ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಯಿಂದಾಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ದೇಹಗಳು ಛಿದ್ರ ಛಿದ್ರವಾಗಿವೆ. 8 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಗಾಯಾಳುಗಳು ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟವರನ್ನು ದಾದಿ ರಾಮಲಕ್ಷ್ಮಿ, ಪುರಂ ಪಾಪ, ಗುಂಪಿನ ವೇಣು, ಸೇನಾಪತಿ ಬಾಬುರಾವ್, ಮನೋಹರ್, ದೇವರ ನಿರ್ಮಲಾ, ಅಪ್ಪಿಕೊಂಡ ತಾತಾಬಾಬು ಮತ್ತು ಸಂಗರಿಗೋವಿಂದು ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕಾಕಿನಾಡ ಜಿಲ್ಲೆಯ ಸಾಮರ್ಲಕೋಟ ಪ್ರದೇಶದವರು. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ.
ಘಟನೆ ನಡೆದ ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆಯುವ ಕೆಲಸ ಮಾಡಿದ್ದಾರೆ. ಸ್ಥಳೀಯರು ಸಹ ಪೊಲೀಸರಿಗೆ ಸಹಾಯ ಮಾಡಿದ್ದಾರೆ. ಸ್ಫೋಟದ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ. ಘಟಕವು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿತ್ತೇ ಅಥವಾ ಪರವಾನಗಿ ಪಡೆದಿತ್ತೇ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂಒ ಕಾರ್ಯಾಲಯ, “ಪಾಯಕರಾವ್ಪೇಟ್ ಕ್ಷೇತ್ರದ ಕೊಟವುರಟ್ಲದಲ್ಲಿ ಸಂಭವಿಸಿದ ಈ ಭೀಕರ ಅಗ್ನಿ ಅವಘಡದ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ,” ಎಂದು ತಿಳಿಸಿದೆ. ಮುಖ್ಯಮಂತ್ರಿ ನಾಯ್ಡು ಅವರು ಗೃಹ ಸಚಿವೆ ಅನಿತಾ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ ಸೂಚಿಸಿದ್ದಾರೆ. ಅಲ್ಲದೆ, ಈ ಘಟನೆಯ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಗೃಹ ಸಚಿವೆ ವಿ. ಅನಿತಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅನಕಪಲ್ಲಿ ಜಿಲ್ಲೆಯಲ್ಲಿ ಇಂತಹ ಅವಘಡಗಳು ಇದೇ ಮೊದಲೇನಲ್ಲ. 2015ರಲ್ಲಿ ಎಸ್. ರಾಯವರಂ ಮಂಡಲದ ಗೋಕುಲಪಾಡುವಿನಲ್ಲಿ ಸಂಭವಿಸಿದ ಪಟಾಕಿ ಘಟಕದ ಸ್ಫೋಟದಲ್ಲಿ 9 ಮಂದಿ ಮೃತಪಟ್ಟಿದ್ದರು. ಆ ಪೈಕಿ ಮೂವರು ಮಹಿಳೆಯರಾಗಿದ್ದರು. ಆ ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದರು. ಈ ರೀತಿಯ ಘಟನೆಗಳು ಪಟಾಕಿ ತಯಾರಿಕಾ ಘಟಕಗಳಲ್ಲಿ ಸುರಕ್ಷತಾ ಮಾನದಂಡಗಳ ಕೊರತೆಯನ್ನು ಎತ್ತಿ ತೋರಿಸುತ್ತವೆ.