ಬಳ್ಳಾರಿ : ಜಿಲ್ಲೆಯ ಬಿಎಂಇಆರ್ಸಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ದಾಖಲಾಗಿದ್ದ ವೃದ್ಧೆ ಸಾವನ್ನಪ್ಪಿದ ಘಟನೆ ವಿವಾದಕ್ಕೆ ಕಾರಣವಾಗಿದ್ದು, ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಆಪರೇಷನ್ ನಂತರ ಸೂಕ್ತ ಔಷಧಿ, ಇಂಜೆಕ್ಷನ್ ನೀಡದ ಕಾರಣದಿಂದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಬಾಯಿಯ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಅಕ್ಕಮ್ಮ (70) ಎಂಬುವವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಪ್ರಿಲ್ 17ರಂದು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆಪರೇಷನ್ ಯಶಸ್ವಿಯಾಗಿ ನಡೆದಿತ್ತು ಎಂದು ವೈದ್ಯರು ತಿಳಿಸಿದ್ದರು. ಶಸ್ತ್ರಚಿಕಿತ್ಸೆಯ ನಂತರವೂ ವೈದ್ಯರು ಸರಿಯಾಗಿಯೇ ನೋಡಿಕೊಂಡಿದ್ದರು ಎನ್ನಲಾಗಿದೆ.
ಆದರೆ ಆಪರೇಷನ್ ಬಳಿಕ ಆಸ್ಪತ್ರೆ ಸಿಬ್ಬಂದಿ ಅಗತ್ಯವಿರುವ ಸಮಯಕ್ಕೆ ಇಂಜೆಕ್ಷನ್, ಔಷಧಿ ಹಾಗೂ ಇತರೆ ಚಿಕಿತ್ಸೆ ನೀಡಲಿಲ್ಲ ಎಂಬ ಆರೋಪ ಕೇಳಿಬಂದಿದೆ. ವೈದ್ಯರು ಸೂಚನೆ ನೀಡಿದ್ದರೂ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದು, ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ದರೆ ಅಕ್ಕಮ್ಮ ಬದುಕುತ್ತಿದ್ದರು ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.
ಆಸ್ಪತ್ರೆಯಲ್ಲಿ ಔಷಧ ಲಭ್ಯವಿಲ್ಲವೆಂದು ಹೇಳಿ ಖಾಸಗಿ ಮೆಡಿಸಿನ್ ಖರೀದಿಸಲು ಹೇಳಲಾಗಿದ್ದು, ಸುಮಾರು 40 ಸಾವಿರ ರೂ. ಖರ್ಚು ಮಾಡಿಸಿದ್ದಾರೆ ಎಂಬ ಆರೋಪವೂ ಇದೆ. ಜೊತೆಗೆ, ಖಾಸಗಿ ಪ್ರಯೋಗಾಲಯದಲ್ಲಿ ರಕ್ತ ಪರೀಕ್ಷೆ ಮಾಡಿಸಲು ಒತ್ತಾಯಿಸಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ, ಅಕ್ಕಮ್ಮ ಸಾವಿಗೆ ಕಾರಣವಾದ ಸಿಬ್ಬಂದಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!



















