ಉಡುಪಿ: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಸೃಷ್ಠಿಸಿ ಭಕ್ತರಿಂದ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ತಿಜಾರಿ ಜಿಲ್ಲೆಯ ನಾಸೀರ್ ಹುಸೇನ್(21) ಬಂಧಿತ ಆರೋಪಿ. ಈತ ದೇವಸ್ಥಾನದ ಅಧಿಕೃತ ವೆಬ್ಸೈಟ್ನ್ನು ಹೊಲುವ ನಕಲಿ ವೆಬ್ ಸೈಟ್ ಸೃಷ್ಠಿಸಿ ದೇವಸ್ಥಾನದ ಭಕ್ತಾಧಿಗಳಿಂದ ಮುಂಗಡವಾಗಿ ರೂಮ್ ಬುಕಿಂಗ್ ಮಾಡಿಸುವ ಬಗ್ಗೆ ಹಣವನ್ನು ಪಡೆದು, ನಕಲಿ ರಶೀದಿ ನೀಡಿ ವಂಚನೆ ಮಾಡುತ್ತಿದ್ದನು. ಈ ಬಗ್ಗೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಕಾರ್ಯಾನಿರ್ವಹಣಾಧಿಕಾರಿ ನೀಡಿದ ದೂರಿನಂತೆ ನ.3ರಂದು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದು ಮುಜರಾಯಿ ಇಲಾಖೆ ದೇವಸ್ಥಾನಕ್ಕೆ ಸಂಬಂಧಿಸಿದ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ದಾಖಲಾದ ಪ್ರಕರಣವಾಗಿದ್ದರಿಂದ, ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ ಬಿ., ಕುಂದಾಪುರ ವೃತ್ತ ನಿರೀಕ್ಷಕ ಸಂತೋಷ ಎ. ಕಾಯ್ಕಿಣಿ ಹಾಗೂ ಕೊಲ್ಲೂರು ಉಪನಿರೀಕ್ಷಕ ವಿನಯ ಎಂ. ಕೋರ್ಲಹಳ್ಳಿ ನೇತೃತ್ವದ ತಂಡವನ್ನು ರಚಿಸಲಾಗಿತ್ತು.
ತನಿಖೆ ನಡೆಸಿದ ತಂಡ, ಆರೋಪಿಯನ್ನು ಡಿ.19ರಂದು ರಾಜಸ್ಥಾನದ ದಾಖಾಪುರಿ ಎಂಬಲ್ಲಿ ಬಂಧಿಸಿದ್ದು, ಆತನಿಂದ ಕೃತ್ಯಕ್ಕೆ ಬಳಸಿದ ಲ್ಯಾಪ್ಟಾಪ್ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಡಿ.20ರಂದು ಆರೋಪಿಯನ್ನು ಬೈಂದೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ.
ಇದನ್ನೂ ಓದಿ: ಹಾನಗಲ್ನಲ್ಲಿ ಭೀಕರ ರಸ್ತೆ ಅಪಘಾತ | ಬೈಕ್ ಸವಾರ ಸಾವು



















